ಹೊಸಪೇಟೆ (ವಿಜಯನಗರ) : ‘ನನ್ನ ಇಲಾಖೆಯಲ್ಲಿ ಭ್ರಷ್ಟಾಚಾರವಾಗಿದ್ದರೆ ಯಾವುದೇ ತನಿಖೆಗೂ ಸಿದ್ಧ’ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ಶಾಸಕ ಪ್ರಿಯಾಂಕ್ ಖರ್ಗೆ ಅವರು ಇತ್ತೀಚೆಗೆ ನನ್ನ ಇಲಾಖೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಆದರೆ, ಅನಂತರ ಆರೋಪಗಳನ್ನು ಮಾಡಿ ಟೀಕಿಸಿದ್ದಾರೆ. ಆರೋಪ, ಟೀಕೆ ಮಾಡುವುದು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವಕಾಶವಿದೆ. ಆದರೆ, ಸತ್ಯಕ್ಕೆ ಅಪಚಾರವಾಗುವ ರೀತಿಯಲ್ಲಿ ಆರೋಪ ಮಾಡಬಾರದು ಎಂದು ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕೊಳವೆಬಾವಿ ಟೆಂಡರ್ ಸಂಪೂರ್ಣ ಪಾರದರ್ಶಕವಾಗಿ ನಡೆದಿದೆ. ಗುಣಮಟ್ಟದಲ್ಲಿ ಲೋಪದೋಷ ಕಂಡರೆ ಅನುದಾನ ಬಿಡುಗಡೆಗೊಳಿಸಿಲ್ಲ. ರೈತರ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗುತ್ತಿದೆ. ಅಧಿಕಾರಿಗಳು ಸೇರಿದಂತೆ ಯಾರಿಂದಾದರೂ ಭ್ರಷ್ಟಾಚಾರವಾಗಿದ್ದರೆ ಯಾವುದೇ ತನಿಖೆಗೂ ಸಿದ್ಧ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. 150ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲುವು ನಿಶ್ಚಿತ ಎಂದು ಭರವಸೆ ವ್ಯಕ್ತಪಡಿಸಿದರು. ಶಾಸಕ ಪಿ.ರಾಜೀವ್ ಇದ್ದರು.