ಯಾದಗಿರಿ: ಯಾದಗಿರಿ ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕಗಳು ಕ್ಷಮತೆಯಿಂದ ನಿರಂತರವಾಗಿ ಕಾರ್ಯನಿರ್ವಹಿಸಲು ಗಮನಹರಿಸಲು ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಅವರು ಸೂಚಿಸಿದ್ದಾರೆ. ಅವರು ಈ ಸಂಬಂಧ ತಮ್ಮ ಕಚೇರಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಆಕ್ಸಿಜನ್ ಘಟಕ ಪೈಪ್ ಲೈನ್ ಕಾರ್ಯ ನಿರ್ವಹಿಸುವ ಬಗ್ಗೆ ಕ್ಷಣ ಕ್ಷಣಕ್ಕೂ ಗಮನಹರಿಸಬೇಕು. ಆಕ್ಸಿಜನ್ ಬೆಡ್ ಗಳನ್ನು ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ ಅಳವಡಿಸಲು ಅವರು ಸೂಚಿಸಿದರು.
ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಡಾಕ್ಟರ್ ಹುದ್ದೆಗಳು ಖಾಲಿ ಇರುವ ಬಗ್ಗೆ ಎಲ್ಲಾ ಚಿಕಿತ್ಸೆಗೆ ಸಂಬಂಧಿಸಿದ ಡಾಕ್ಟರ್ ಗಳನ್ನು ಅವರ ಹುದ್ದೆಗಳ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಅವರು ತಿಳಿಸಿದರು.
ಆಕ್ಸಿಜನ್ ಘಟಕಕ್ಕೆ ನಿರಂತರ ವಿದ್ಯುತ್ ಸರಬರಾಜು ಮಾಡಿ, ಯಾವುದೇ ಕಾರಣಕ್ಕೆ ಸ್ಥಗಿತವಾಗದ ರೀತಿಯಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ಗಮನ ಕೊಡಲು ವಿದ್ಯುತ್ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ತಾಲ್ಲೂಕು ಆರೋಗ್ಯ ಇಲಾಖೆ ಕಟ್ಟಡ ಮತ್ತು ರಸ್ತೆ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಮುಗಿಸಬೇಕು ಎಂದು ಪಿ ಡಬ್ಲ್ಯೂ ಇಂಜಿನಿಯರ್ ಗಳಿಗೆ ಅವರು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಇಂದುಮತಿ ಕಾಮಶೆಟ್ಟಿ, ಸುರಪುರ ತಾಲೂಕು ಆರೋಗ್ಯಾಧಿಕಾರಿ ಡಾ. ವೆಂಕಟಪ್ಪ ನಾಯಕ ಇತರರು ಉಪಸ್ಥಿತರಿದ್ದರು.