ಬೆಂಗಳೂರು: ಶೇಕಡ 60ರಷ್ಟು ಕನ್ನಡ ಫಲಕ ಹಾಕಿಲ್ಲವೆಂದು ಮಳಿಗೆಗಳನ್ನು ಮುಚ್ಚುವುದು ಸರಿಯಲ್ಲ ಎಂದು ಹೈಕೋರ್ಟ್ ಹೇಳಿದೆ. ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಸದ ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ರಾಜ್ಯದ ವಾಣಿಜ್ಯ ಸಂಸ್ಥೆಗಳ ನಾಮಪಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸಿ ಜಾರಿಗೊಳಿಸಲಾದ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ ಅನ್ವಯ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಸದ ಸಂಸ್ಥೆಗಳನ್ನು ಮುಚ್ಚುವುದಾಗಿ 2024ರ ಫೆಬ್ರವರಿ 28ರಂದು ಸುತ್ತೋಲೆ ಹೊರಡಿಸಲಾಗಿದ್ದು, ಇದನ್ನು ಪ್ರಶ್ನಿಸಿ ರಿಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಟೈಟಾನ್ ಕಂಪನಿ, ಪಿವಿಆರ್ ಐನಾಕ್ಸ್ ಮತ್ತಿತರ ಬೃಹತ್ ವಾಣಿಜ್ಯ ಸಂಸ್ಥೆಗಳು ಹೈಕೋರ್ಟಿಗೆ ತಕರಾರು ಅರ್ಜಿ ಸಲ್ಲಿಸಿವೆ.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಸಿದ ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವುದಾಗಿ ತಿಳಿಸಿರುವುದು ಕಠಿಣ ಕ್ರಮವಾಗಲಿದೆ ದಂಡ ಹಾಕುವ ಅಥವಾ ಪರವಾನಿಗೆ ರದ್ದುಪಡಿಸುವ ಕ್ರಮವಾದರೆ ಯೋಚಿಸಬಹುದು. ಆದರೆ, ಸಂಸ್ಥೆಯನ್ನೇ ಮುಚ್ಚುವುದು ಸರಿಯಾದ ಕ್ರಮವಲ್ಲ. ಕಾಯಿದೆ ಮೂಲಕ ನಿಯಮಗಳನ್ನು ಸುತ್ತೋಲೆ ರೂಪದಲ್ಲಿ ಜಾರಿಗೊಳಿಸಲು ಸಾಧ್ಯವಿಲ್ಲ. ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವಂತಹ ಬಲವಂತದ ಕ್ರಮ ಜರುಗಿಸಬಾರದು. ಸುತ್ತೋಲೆಯಲ್ಲಿ ಉಲ್ಲೇಖಿಸಿರುವ ಇತರೆ ಅಂಶಗಳು ಅರ್ಜಿ ಕುರಿತ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತವೆ ಎಂದು ಮಧ್ಯಂತರ ಆದೇಶ ನೀಡಿದೆ.