ಸುಳ್ಯ: ಈಗ ಗ್ರಾಮ ಗ್ರಾಮಗಳಲ್ಲಿ ನಡೆಯುತ್ತಿರುವ ಉದ್ಯೋಗ ನೈಪುಣ್ಯ ಶಿಬಿರವು ಆತ್ಮನಿರ್ಭರ ಭಾರತದೆಡೆಗಿನ ದಿಟ್ಟ ಹೆಜ್ಜೆಯಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಘಚಾಲಕ ಡಾ.ವಾಮನ ಶೆಣೈ ಹೇಳಿದ್ದಾರೆ.
ಗ್ರಾಮ ವಿಕಾಸ ಸಮಿತಿ ಮಂಗಳೂರು, ವಿವೇಕಾನಂದ ವಿಧ್ಯಾವರ್ಧಕ ಸಂಘ ಪುತ್ತೂರು, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಜಾಲ್ಸೂರು, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಇವುಗಳ ಸಂಯುಕ್ತ ಆಶ್ರಯದಲ್ಲಿ ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವಠಾರದಲ್ಲಿ ನಡೆದ ಆತ್ಮನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ನಿರ್ದೇಶಕ ವಾಮನ ಪೈ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಮಾತನಾಡಿದರು. ವಿನೋಬಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಸಂಚಾಲಕ ಕೆ. ಸುಧಾಕರ ಕಾಮತ್, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಅಧ್ಯಕ್ಷ ಪ್ರಸನ್ನ ಭಟ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಹಕಾರ್ಯವಾಹ ಡಾ. ಮನೋಜ್, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಶಿಬಿರದ ಸಂಯೋಜಕರಾದ ಪ್ರಭೋದ್ ಶೆಟ್ಟಿ ಮೇನಾಲ, ಹೇಮಂತ್ ಮಠ, ನಿವೇದಿತ ಕೋನಡ್ಕಪದವು, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ, ಮಂಡೆಕೋಲು ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ, ಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಚಾಕೋಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆರು ದಿನಗಳ ಕಾಲ ನಡೆದ ಶಿಬಿರದಲ್ಲಿ ಕೃಷಿ ಯಂತ್ರೋಪಕರಣಗಳ ದುರಸ್ತಿ, ವಿದ್ಯುತ್ ಉಪಕರಣಗಳ ದುರಸ್ತಿ(ಗ್ಯಾಸ್ ಸ್ಟವ್, ಗ್ಯಾಸ್ ಗೀಝರ್ ಸಹಿತ), ಪ್ಲಂಬಿಂಗ್, ಇಲೆಕ್ಟ್ರೀಷಿಯನ್, ಫ್ಯಾಷನ್ ಡಿಸೈನಿಂಗ್, ಪುಡ್ ಟೆಕ್ನಾಲಜಿ, ಕೃಷಿ ಕಸಿ ಕಟ್ಟುವುದು, ಜೇನು ಕೃಷಿ, ಹೈನುಗಾರಿಕೆ, ಕೋಳಿ ಸಾಕಾಣೆ, ಆಡು ಸಾಕಾಣೆ, ಮೊಬೈಲ್ ಫೋನ್ ದುರಸ್ತಿಯ ಬಗ್ಗೆ ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನಡೆಯಿತು. ಶಿಬಿರಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.