ಸುಳ್ಯ: ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸುಳ್ಯ ನಗರ ಪಂಚಾಯಿತಿಗೆ ಆಗಮಿಸಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಹಿಂದಿನ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಅನುಷ್ಠಾನದ ಬಗ್ಗೆ ಅವರು ಪರಿಶೀಲಿಸಿದರು.
ಕಲ್ಚರ್ಪೆಯ ನಗರ ಪಂಚಾಯಿತಿಯ ತ್ಯಾಜ್ಯ ವಿಲೇವಾರಿ ಘಟಕ ತುಂಬಿ ತುಳುಕಿ ಸಮಸ್ಯೆ ಉಂಟಾಗಿರುವ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಈಗ ಹಸಿ ಕಸ ಮತ್ತು ಒಣ ಕಸ ಎಂಬ ರೀತಿಯಲ್ಲಿ ಬೇರ್ಪಡಿಸಿ ಹಸಿ ಕಸವನ್ನು ಮಾತ್ರ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕೊಂಡೊಯ್ಯಲಾಗುತ್ತಿದೆ. ಅಲ್ಲಿರುವ ಕಸವನ್ನು ಬೇರ್ಪಡಿಸಿ ವಿಲೇವಾರಿ ನಡೆಸುವ ಕೆಲಸ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.
ಸಾಹಿತ್ಯ ಸಮ್ಮೇಳನ, ದಸರಾ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ನೀಡಲು ಬಜೆಟ್ನಲ್ಲಿ ಅನುದಾನ ಇರಿಸಿದ್ದರೂ ಅದನ್ನು ವಿನಿಯೋಗಿಸಲು ಅನುಮತಿ ನೀಡಲಾಗುತ್ತಿಲ್ಲ ಎಂದು ಸದಸ್ಯ ಕೆ.ಗೋಕುಲ್ದಾಸ್ ಹೇಳಿದರು. ಈ ಕುರಿತು ಚರ್ಚೆ ನಡೆದಾಗ ಇದನ್ನು ಜಿಲ್ಲಾಧಿಕಾರಿಯ ಗಮನಕ್ಕೆ ತಂದು ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಶ್ರೀನಿವಾಸ ಪೂಜಾರಿ ತಿಳಿಸಿದರು.
ಸುಳ್ಯದಲ್ಲಿ ಗಾಂಧೀಮಂಟಪ ಮತ್ತು ಕ್ರೀಡಾಂಗಣಕ್ಕೆ ಭೂ ಮಂಜೂರಾತಿ ಆಗಬೇಕೆಂದು ಹಲವು ಬಾರಿ ನಿರ್ಣಯ ಕೈಗೊಂಡರೂ ಅನುಷ್ಠಾನ ಆಗಿಲ್ಲ ಎಂದು ಗೋಕುಲ್ದಾಸ್ ಹೇಳಿದಾಗ ಈ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸುವುದಾಗಿ ಅವರು ಹೇಳಿದರು.
ನಗರ ಪಂಚಾಯಿತಿ ಅಧ್ಯಕ್ಷೆ ಶೀಲಾವತಿ ಮಾಧವ, ಉಪಾಧ್ಯಕ್ಷೆ ಹರಿಣಾಕ್ಷಿ ನಾರಾಯಣ, ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಕುರುಂಜಿ ಉಪಸ್ಥಿತರಿದ್ದರು.