ಬೆಳ್ತಂಗಡಿ: ಸರ್ವಧರ್ಮ ಸಮನ್ವಯ ಕ್ಷೇತ್ರವೆಂಬ ಹೆಗ್ಗೆಳಿಕೆಗೆ ಪಾತ್ರವಾಗಿರುವ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವದ ಪ್ರಯುಕ್ತ ಉಜಿರೆ ಶ್ರೀಜನಾರ್ದನ ಸ್ವಾಮಿ ಸನ್ನಿಧಿ ಯಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ 8ನೇ ವರ್ಷದ ಪಾದಯಾತ್ರೆಯ ಕುರಿತು ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಸಮಿತಿ ವತಿಯಿಂದ ಸಮಾಲೋಚನಾ ಸಭೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆಯಿತು.
ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ, ಪಾದಯಾತ್ರೆ ಸಮಿತಿ ಅಧ್ಯಕ್ಷ ಡಾ.ಬಿ.ಯಶೋವರ್ಮ ಅವರು, ಕೊರೋನಾ ಹಿನ್ನೆಲೆಯಲ್ಲಿ ಸರಕಾರದ ಮಾರ್ಗಸೂಚಿಯನ್ನು ಅನುಸರಿಸಿಕೊಂಡು ಪಾದಯಾತ್ರೆಯನ್ನು ಮುನ್ನೆಡೆಸುವ ಕುರಿತು ಸಭೆಯಲ್ಲಿ ಚರ್ಚಿಸಿದರು.ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಪ್ರಸ್ತಾವಿಸಿ, ಪಾದಯಾತ್ರೆಯ ಸಂದರ್ಭ ಅನುಸರಿಸಬೇಕಾದ ಕ್ರಮಗಳ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು. ಭಕ್ತಾದಿಗಳು ಭಜನೆಯ ಮೂಲಕ ಶ್ರೀ ಮಂಜುನಾಥಸ್ವಾಮಿಯನ್ನು ಸ್ತುತಿಸಿ ಪಾದಯಾತ್ರೆ ಯಲ್ಲಿ ಶಿಸ್ತು ಬದ್ಧವಾಗಿ ,ಶಾಂತರೀತಿಯಿಂದ ಸಾಗಿ ಬರಲು ನಿರ್ಣಯಿಸಲಾಯಿತು . ಸಾರ್ವಜನಿಕರಿಂದ ಅಭಿಪ್ರಾಯಗಳು ವ್ಯಕ್ತಗೊಂಡವು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್. ಮಂಜುನಾಥ್, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಳದ ಶರತ್ಕೃಷ್ಣ ಪಡ್ವೆಟ್ನಾಯ, ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ವಸಂತ ಸಾಲಿಯಾನ್ ಕಾಪಿನಡ್ಕ ಅವರು ಪಾದಯಾತ್ರೆಯ ಕುರಿತು ಸಭೆಯಲ್ಲಿ ಅಭಿಪ್ರಾಯ ಮಂಡಿಸಿದರು.
ಡಿ.10 ರಂದು ಮಧ್ಯಾಹ್ನ 3 ಗಂಟೆಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ಬಳಿ ದೀಪ ಪ್ರಜ್ವಲನೆಯಿಂದ ಉದ್ಘಾಟಿಸಲ್ಪಟ್ಟು ಧರ್ಮಸ್ಥಳದ ವರೆಗೆ ಪಾದಯಾತ್ರೆ ನಡೆಸುವುದಾಗಿ ಸಭೆಯಲ್ಲಿ ನಿರ್ಣಯಿಸಲಾಯಿತು. ತಾಲೂಕಿನ ಗಣ್ಯರು, ಧರ್ಮಸ್ಥಳದ ವರ್ತಕರು, ನಾಗರಿಕರು, ಹೆಗ್ಗಡೆಯವರ ಅಭಿಮಾನಿಗಳು ಸಭೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.