ಸುಳ್ಯ: ಕನಕಮಜಲು ಮುಗೇರ್ ಎಂಬಲ್ಲಿ ಶಾಲಾ ಶಿಕ್ಷಕಿಯೊಬ್ಬರು ಶಾಲಾ ಮಕ್ಕಳನ್ನು ಗೃಹಪ್ರವೇಶಕ್ಕೆ ಕರೆದುಕೊಂಡು ಹೋಗಿ ಪ.ಜಾತಿಯ ಮಕ್ಕಳನ್ನು ಹೊರಗೆ ನಿಲ್ಲಿಸಿ ಅಸ್ಪ್ರಶ್ಯತೆಗೆ ಕುಮ್ಮಕ್ಕು ನೀಡಿದ ಪ್ರಕರಣವನ್ನು ಖಂಡಿಸಿ ಇದಕ್ಕೆ ಕಾರಣಕರ್ತರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿಯ ನೇತೃತ್ವದಲ್ಲಿ ಸುಳ್ಯ ಪೊಲೀಸ್ ಠಾಣೆಯ ಎದುರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಲಿತ್ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ಅಸ್ಪ್ರಶ್ಯತೆಯಂತಹ ಘೋರ ಅನ್ಯಾಯ ಮಾಡಿ ಮಕ್ಕಳ ಮನಸ್ಸಿಗೆ ಘಾಸಿ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಇಂತಹಾ ಘಟನೆಗಳು ಇನ್ನು ಮುಂದೆ ಆಗದಂತೆ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು. ದಲಿತರ ಮೇಲೆ ನಿರಂತರ ದಬ್ಬಾಳಿಕೆ ಮತ್ತು ಅನ್ಯಾಯ ನಡೆಯುತ್ತಿದ್ದರೂ ಅದರ ವಿರುದ್ಧ ಯಾವುದೇ ರಾಜಕೀಯ ಪಕ್ಷಗಳೂ ಚಕಾರವೆತ್ತುವುದಿಲ್ಲ ಇದು ಖಂಡನೀಯ ಎಂದು ಹೇಳಿದರು.
ದಲಿತ್ ಸೇವಾ ಸಮಿತಿಯ ಸುಳ್ಯ ತಾಲೂಕು ಅಧ್ಯಕ್ಷ ಉಮೇಶ್ ನೂಜಾಡಿ, ಪುತ್ತೂರು ತಾಲೂಕು ಅಧ್ಯಕ್ಷ ಗಿರಿಧರ, ಕೆ.ಪಿ.ಆನಂದ, ಅಣ್ಣಿ ಎಲ್ತಿಮಾರ್, ಲಿಂಗಪ್ಪ ನೆಕ್ಕಿಲ, ಪದ್ಮಯ್ಯ ಕೊಂಬಾರು, ಗೋಪಾಲ ನೇರಳಕಟ್ಟೆ, ಅಶೋಕ್, ಸುಪ್ರಿತಾ ಮತ್ತಿತರರು ನೇತೃತ್ವ ವಹಿಸಿದ್ದರು. ಬಳಿಕ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದರು. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು. ಮನವಿ ಸ್ವೀಕರಿಸಿದ ಎಸ್ಐ ಚಂದ್ರಶೇಖರ ಹೆಚ್.ವಿ. ಈ ಘಟನೆಯ ಕುರಿತು ಪ್ರಕರಣ ದಾಖಲಿಸಲಾಗಿದ್ದು ತನಿಖೆಯ ಹಂತದಲ್ಲಿದೆ. ಪ್ರತಿಭಟನಾಕಾರರು ನೀಡಿದ ಮನವಿಯನ್ನು ಪ್ರಕರಣದ ತನಿಖಾಧಿಕಾರಿಯ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.