ಬೆಳ್ತಂಗಡಿ: ತಾಲೂಕು ವ್ಯಾಪ್ತಿಯಲ್ಲಿನ ವಿವಿಧ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ ಹಾಗೂ ಏತ ನೀರಾವರಿ ಯೋಜನೆಗಳಿಗಾಗಿ ಸರಕಾರ ರೂ. 240 ಕೋಟಿ ಬಿಡುಗಡೆಗೊಳಿಸಿದೆ ಎಂದು ಶಾಸಕ ಹರೀಶ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಂತರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಬೆಳ್ತಂಗಡಿ ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳ ಅಭಿವೃದ್ಧಿ ಕಾರ್ಯಗಳಿಗೆ ರೂ.240 ಕೋಟಿ ಅನುದಾನವನ್ನು ಪ್ರಕಟಿಸಿದ್ದಾರೆ.
ಬಮೊಗ್ರು ಗ್ರಾಮದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ, ಇಳಂತಿಲ, ಬಂದಾರು,ಕಣಿಯೂರು,ಉರುವಾಲು, ಕಳಿಯ,ನ್ಯಾಯತರ್ಪು, ಓಡಿಲ್ನಾಳ, ಕುವೆಟ್ಟು ಗ್ರಾಮಗಳಲ್ಲಿ ನೀರಾವರಿ ಸೌಲಭ್ಯವನ್ನು ಅಭಿವೃದ್ಧಿಗೊಳಿಸಲು, ಗುರುವಾಯನಕೆರೆ ಅಭಿವೃದ್ಧಿ ಕಾರ್ಯಗಳಿಗೆ ಈ ಅನುದಾನ ಬಳಕೆಯಾಗಲಿದೆ ಎಂದು ಶಾಸಕರು ಮಾಹಿತಿ ನೀಡಿದ್ದಾರೆ.