ಮೂಡುಬಿದಿರೆ: ಜವನೆರ್ ಬೆದ್ರ, ಸಮುದಾಯ ಆರೋಗ್ಯ ಕೇಂದ್ರ, ಪುರಸಭೆ ಮೂಡುಬಿದಿರೆ, ತಾಲೂಕು ಪತ್ರಕರ್ತರ ಸಂಘ ಹಾಗೂ ಆಳ್ವಾಸ್ ನರ್ಸಿಂಗ್ ವಿದ್ಯಾರ್ಥಿಗಳ ಸಂಯುಕ್ತ ಆಶ್ರಯದಲ್ಲಿ ಮಲೇರಿಯಾ ವಿರೋಧ ಮಾಸಾಚರಣೆಯ ಪ್ರಚಾರದ 9ನೇ ಕಾರ್ಯಕ್ರಮವು ಲಾಡಿ ವ್ಯಾಪ್ತಿಯಲ್ಲಿ ಮಂಗಳವಾರ ನಡೆಯಿತು.
ಪುರಸಭೆಯ ನೂತನ ಸದಸ್ಯ ಸುರೇಶ್ ಪ್ರಭು, ಪುರಸಭೆಯ ಪರಿಸರ ಅಭಿಯಂತರೆ ಶಿಲ್ಪಾ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಕ ಕುಮಾರ್ ಅವರು ಜಂಟಿಯಾಗಿ ಪ್ರಚಾರ ಜಾಥಾಕ್ಕೆ ಚಾಲನೆಯನ್ನು ನೀಡಿದರು,
ನಂತರ ಮಾತನಾಡಿದ ಸುರೇಶ್ ಪ್ರಭು ಅವರು, ಮಲೇರಿಯಾ ಮತ್ತು ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಉತ್ತಮವಾದುದು. ಮಳೆಗಾಲದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಹಲವು ರೋಗಗಳು ಬರುತ್ತವೆ ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮತ್ತು ಪುರಸಭೆಯು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿರುವುದು ಪ್ರಶಂಸನೀಯ ಎಂದರು.
ಜವನೆರ್ ಬೆದ್ರ ತಂಡದ ಸದಸ್ಯರು ಮತ್ತು ಪುರಸಭೆಯ ಪೌರ ಕಾರ್ಮಿಕರು ಲಾಡಿ ಪರಿಸರದಲ್ಲಿ ಬಿದ್ದಿರುವ ಪ್ಲಾಸ್ಟಿಕ್ ತ್ಯಾಜ್ಯ, ತೋಡುಗಳಲ್ಲಿ ತುಂಬಿರುವ ತ್ಯಾಜ್ಯಗಳನ್ನು ತೆಗೆದು ಸ್ವಚ್ಛಗೊಳಿಸಿದರು. ಕಿರಿಯ ಆರೋಗ್ಯ ನಿರೀಕ್ಷಕ ರಾಘವೇಂದ್ರ ಉಪಸ್ಥಿತರಿದ್ದರು.