ಬೆಳ್ತಂಗಡಿ : ‘ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳ ತಂಡ ಏಕಾಏಕಿ ಲಾಠಿ ಪ್ರಹಾರ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ್ದಾರೆ.
ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ ಪೊಲೀಸರ ಮೇಲೆ ಸೂಕ್ತ ರೀತಿಯ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು’ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಫಯಾಝ್ ದೊಡ್ಡಮನೆ ಒತ್ತಾಯಿಸಿದರು.
ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮೇ.25ರಂದು ಬೆಳ್ತಂಗಡಿ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯ ಮೇಲೆ ಅದೇ ಕಾಲೇಜಿನ ಎಬಿವಿಪಿ ಕಾರ್ಯಕರ್ತರು ವಾಟ್ಸಫ್ ಸ್ಟೇಟಸ್ಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ್ದರು.
ಈ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿಗೆ ನ್ಯಾಯ ದೊರಕಿಸಲು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆಗೆ ಕರೆ ನೀಡಿದ್ದು, ಪ್ರತಿಭಟನೆಯ ಮುಕ್ತಾಯ ಹಂತದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳ ತಂಡ ವಿದ್ಯಾರ್ಥಿಗಳ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾರೆ. ವಿದ್ಯಾರ್ಥಿಗಳನ್ನು ಅಟ್ಟಾಡಿಸಿಕೊಂಡು ಹೋಗಿದ್ದು ಮಾತ್ರವಲ್ಲ ಲಾಠಿ ಮೂಲಕ ಹಲ್ಲೆ ಮಾಡಿದ್ದಾರೆ. ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಶಾಸಕರ ಆದೇಶದಂತೆ ಅವಾಚ್ಯ ಶಬ್ಧಗಳಿಂದ ಬೈದಿದ್ದು ಮಾತ್ರವಲ್ಲ, ಉಪವಾಸನಿರತರ ಮೇಲೆ ಅಮಾನುಷವಾಗಿ ಚಿತ್ರಹಿಂಸೆ ನೀಡಿದ್ದಾರೆ ಎಂದರು.
ಬೆಳ್ತಂಗಡಿ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ವಿದ್ಯಾರ್ಥಿಗಳ ಮೇಲೆ ಕಾಲಿನ ಶೂನಲ್ಲಿ ತಲೆಯನ್ನು ಜಜ್ಜಿದ್ದಾರೆ. ಠಾಣೆಯಲ್ಲಿ ವಿದ್ಯಾರ್ಥಿಗಳನ್ನು ಭಯೋತ್ಪಾದಕರು ಎಂದು ಅವರು ಕರೆಯುತ್ತಿದ್ದರು. ಪೊಲೀಸ್ ಸಿಬ್ಬಂದಿ ಪ್ರತ್ಯೇಕ ಕೋಣೆಯೊಳಗೆ ವಿದ್ಯಾರ್ಥಿಗಳನ್ನು ಕೂಡಿ ಹಾಕಿ ತಲೆ, ಬೆನ್ನು ಮತ್ತು ಮರ್ಮಾಂಗಕ್ಕೆ ತುಳಿದಿದ್ದಾರೆ. ಕಾಲಿನ ಶೂನಲ್ಲಿನ ಮಣ್ಣನ್ನು ತಿನ್ನಲು ಹೇಳಿ ಉಪವಾಸ ಬಿಡು ಎಂದದ್ದು ಮಾತ್ರವಲ್ಲ, 200ರಷ್ಟು ಬಸ್ಕಿಯನ್ನು ತೆಗೆಸಿದ್ದಾರೆ. ಪೊಲೀಸರ ಈ ರೀತಿಯ ಕ್ರಮ ಕಾನೂನು ವಿರೋಧಿಯಾಗಿದ್ದು, ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದಲೇ ಇಂತಹ ಘಟನೆ ನಡೆದಿದೆ ಎಂದು ಅವರು ಆರೋಪಿಸಿದರು.
‘ಈ ಘಟನೆಯ ಬಗ್ಗೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದು ತನಿಖೆ ನಡೆಸುವ ಭರವಸೆ ನೀಡಿದ್ದಾರೆ. ಘಟನೆಯ ಕುರಿತು ಮಾನವ ಹಕ್ಕಗಳ ಆಯೋಗ, ರಾಜ್ಯ ಗೃಹ ಸಚಿವ ಹಾಗೂ ಪೊಲೀಸ್ ಪ್ರಾಧಿಕಾರಕ್ಕೆ ದೂರು ನೀಡಲಾಗುವುದು. ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದರೆ ಮುಂದೆ ಬೆಳ್ತಂಗಡಿಯಲ್ಲಿ ಉಗ್ರ ಪ್ರತಿಭಟನೆಯನ್ನು ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ಅಶ್ವಾನ್ ಸಾಧಿಕ್, ಜಿಲ್ಲಾ ಉಪಾಧ್ಯಕ್ಷ ಮಹಮ್ಮದ್ ನೌಫಲ್, ರಾಜ್ಯ ಸಮಿತಿ ಸದಸ್ಯ ಇಮ್ರಾನ್ ಪಿ.ಜೆ ಇದ್ದರು.