ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಸತತ 18 ಗಂಟೆಗಳ ವಿಚಾರಣೆಯ ನಂತರ ಜಾರಿ ನಿರ್ದೇಶನಾಲಯ (ಇಡಿ) ತಮಿಳುನಾಡು ವಿದ್ಯುತ್ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಬುಧವಾರ ಬಂಧಿಸಿದೆ. ಸಚಿವರು, ಬಂಧನದ ನಂತರ ಪ್ರಜ್ಞಾಹೀನರಾಗಿದ್ದು, ಪ್ರಸ್ತುತ ಚೆನ್ನೈನ ಒಮರಂದೂರ್ ಎಸ್ಟೇಟ್ನಲ್ಲಿರುವ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಗಳವಾರ ಸಚಿವರ ಅಧಿಕೃತ ನಿವಾಸದಲ್ಲಿ ವಿಚಾರಣೆ ನಡೆಸಲಾಗಿದ್ದು, ಅವರ ಮನೆ ಮತ್ತು ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ.
ಬಾಲಾಜಿ ಬಂಧನದ ಕಾರಣದ ಕುರಿತು ಕೇಂದ್ರ ತನಿಖಾ ಸಂಸ್ಥೆ ಇದುವರೆಗೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. ಆದರೆ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಎಐಎಡಿಎಂಕೆ ಸರ್ಕಾರದಲ್ಲಿ ಅವರು ಸಚಿವರಾಗಿದ್ದಾಗ ಉದ್ಯೋಗ ನೇಮಕಾತಿ ದಂಧೆಗೆ ಸಂಬಂಧಿಸಿ ಅಕ್ರಮವಾಗಿ ಹಣ ವರ್ಗಾವಣೆ ನಿಟ್ಟಿನಲ್ಲಿ ಬಂಧನ ನಡೆದಿದೆ ಎನ್ನಲಾಗಿದೆ.
ಬಂಧನ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಡಿಎಂಕೆ ನಾಯಕ ಮತ್ತು ತಮಿಳುನಾಡು ಕ್ರೀಡಾ ಅಭಿವೃದ್ಧಿ ಮತ್ತು ಯುವ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್, ಕೇಂದ್ರ ಸರ್ಕಾರದ ಬೆದರಿಕೆ ತಂತ್ರಗಳಿಗೆ ನಾವು ಬಗ್ಗುವುದಿಲ್ಲ ಎಂದು ಹೇಳಿದ್ದಾರೆ.