ಮಂಗಳೂರು: ರಾಜ್ಯ ಬಿಜೆಪಿ ಸರಕಾರವು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಸ್ಥಳೀಯ ಆಡಳಿತಕ್ಕೆ ಒತ್ತು ನೀಡಿ ಪಂಚಾಯತ್ ರಾಜ್ ವ್ಯವಸ್ಥೆಗೆ ನೀಡಲಾಗಿದ್ದ ಅಧಿಕಾರವನ್ನು ಮೊಟಕುಗೊಳಿಸಲು ಮುಂದಾಗಿದೆ.
ಈ ತಿದ್ದುಪಡಿಯನ್ನು ಹಿಂಪಡೆಯದಿದ್ದರೆ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ತೀವ್ರ ಹೋರಾಟವನ್ನು ನಡೆಸಲಾಗುವುದು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಸಮಿತಿ ಅಧ್ಯಕ್ಷ ಸುಭಾಷ್ ಶೆಟ್ಟಿ ಕೊಲ್ನಾಡ್ ಹೇಳಿದ್ದಾರೆ.
ಅವರು ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಾಯತ್ ರಾಜ್ ಇಲಾಖೆಗೆ ಸಚಿವರೇ ಇಲ್ಲವಾಗಿದೆ ಎಂದು ಆಕ್ಷೇಪಿಸಿದರು.
ಆಡಳಿತ ವ್ಯವಸ್ಥೆಯಲ್ಲಿ ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡಿ ತ್ರಿಸ್ತರದ ಆಡಳಿತ ಜಾರಿಯಲ್ಲಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಕಲ್ಪನೆಯಡಿ ಪಂಚಾಯತ್ರಾಜ್ಗೆ ತಿದ್ದುಪಡಿ ತಂದು ಈ ತ್ರಿಸ್ತರದ ಅಧಿಕಾರ ನೀಡಲಾಗಿತ್ತು.
ಬಳಿಕ ಮುಖ್ಯಮಂತ್ರಿಯಾಗಿದ್ದ ಎಸ್.ಎಂ.ಕೃಷ್ಣರವರು ಗ್ರಾಪಂಗಳನ್ನು ಹೆಚ್ಚಿನ ಅಧಿಕಾರ ವ್ಯಾಪ್ತಿಗೆ ಒಳಪಡಿಸಿದ್ದರೆ, ಸಿದ್ದರಾಮಯ್ಯನವರು ಪಂಚಾಯತ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿದ್ದರು. ಆದರೆ ಪ್ರಸಕ್ತ ಬಿಜೆಪಿ ಸರಕಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೊಡಲಿಯೇಟು ನೀಡಿದೆ ಎಂದು ಅವರು ಆರೋಪಿಸಿದರು.