ಮಂಗಳೂರು :ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಪರಿಷತ್ ಕಾರ್ಯಕ್ರಮಕ್ಕೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಅತಿಥಿಯಾಗಿ ಆಹ್ವಾನಿಸುವ ವುದನ್ನು ಖಂಡಿಸಿ ವಿವಿ ಮುಖ್ಯ ದ್ವಾರದ ಬಳಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದ್ದಾರೆ .
ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಹಾಕಿದ್ದು ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ವಿವಿ ಪ್ರವೇಶ ದ್ವಾರದಲ್ಲೇ ತಡೆದು ನಿಲ್ಲಿಸಿದ್ದಾರೆ . ಕೋಮುದ್ವೇಷದ ಭಾಷಣ ಮಾಡುವ ಆರೆಸ್ಸೆಸ್ ಮುಖಂಡ ಪ್ರಭಾಕರ್ ಭಟ್ ಅವರನ್ನು ಯಾವುದೇ ಕಾರಣಕ್ಕೂ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅವಕಾಶ ಕೊಡಬಾರದು ವಿದ್ಯಾ ಕೇಂದ್ರದಲ್ಲಿ ಕೋಮು ಸಾಮರಸ್ಯ ಕದಡುವ ಕಾರ್ಯ ಮಾಡುತ್ತಿದ್ದಾರೆಂದು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಪ್ರತಿಭಟನೆ ನಡುವೆಯೂ ಮಂಗಳೂರು ವಿವಿಯ ಕ್ರೀಡಾಂಗಣದಲ್ಲಿ ಏರ್ಪಡಿಸಲಾದ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ನಿರಾಂತಕವಾಗಿ ನಡೆಯಿತು . ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರ ನೆಲೆಯಲ್ಲಿ ಕಲ್ಲಡ್ಕ ಭಟ್ ಭಾಗವಹಿಸಿ ವಿವಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ನಡೆಸಿದರು . ಮಂಗಳೂರು ವಿವಿ ಕುಲಪತಿ ಪ್ರೊಫೆಸರ್ ಸುಬ್ರಹ್ಮಣ್ಯ ಎಡಪಡಿತ್ತಾಯ ಸೇರಿದಂತೆ ಗಣ್ಯರು ಅತಿಥಿಗಳು ಭಾಗವಹಿಸಿದ್ದರು