ಮಂಗಳೂರು: ಶ್ರೀಲಂಕಾದಲ್ಲಿ ಕೆಲವು ದಿನಗಳಿಂದ ಆರ್ಥಿಕ ಬಿಕ್ಕಟ್ಟು ತಲೆದೋರಿ ಅರಾಜಕತೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ಮತ್ತು ಆಹಾರ ಪದಾರ್ಥಗಳಿಗೆ ಪರದಾಟ ನಡೆಸುವ ಅಲ್ಲಿನ ವಲಸಿಗರು ಸಮುದ್ರ ಮಾರ್ಗವಾಗಿ ಕರಾವಳಿ ತೀರದ ಮೂಲಕ ಭಾರತ ಪ್ರವೇಶಿಸುವ ಸಾಧ್ಯತೆ ಇದೆ. ಹಾಗಾಗಿ ಕರಾವಳಿ ತೀರ ಪ್ರದೇಶದ ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಕರಾವಳಿ ಕಾವಲು ಪೊಲೀಸ್ ಪಡೆಯ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಶ್ರೀಲಂಕಾದಲ್ಲಿ ಆಂತರಿಕ ಕಲಹದಿಂದಾಗಿ ಜನರು ತತ್ತರಿಸಿದ್ದಾರೆ. ಸಮುದ್ರ ಮತ್ತಿತರ ಮಾರ್ಗಗಳ ಮೂಲಕ ಭಾರತಕ್ಕೆ ಆಗಮಿಸಿ ಕರ್ನಾಟಕ ಕರಾವಳಿ ಪ್ರದೇಶದಲ್ಲಿ ಅಕ್ರಮವಾಗಿ ನೆಲೆಸುವ ಸಾಧ್ಯತೆ ಇದೆ. ಹೀಗಾಗಿ ಅಪರಿಚಿತ ವ್ಯಕ್ತಿಗಳಿಗೆ ಮನೆ ಬಾಡಿಗೆ ನೀಡುವ ಸಂದರ್ಭ ಅವರ ಪೂರ್ವಾಪರ ವಿಚಾರಿಸಬೇಕು. ದಾಖಲಾತಿಗಳನ್ನು ಪರಿಶೀಲಿಸಬೇಕು. ಯಾವುದೇ ವ್ಯಕ್ತಿಗಳ ಬಗ್ಗೆ ಸಂಶಯ ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಶ್ರೀಲಂಕಾದ ಜನರು ಅಕ್ರಮವಾಗಿ ಒಳನುಸುಳುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕರಾವಳಿಯ ಜನರು ತೀವ್ರ ಎಚ್ಚರಿಕೆ ವಹಿಸಬೇಕು ಎಂದು ಕರಾವಳಿ ಕಾವಲು ಪೊಲೀಸ್ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.
“ಶ್ರೀಲಂಕಾದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಲ್ಲಿನ ಪ್ರಜೆಗಳು ಸಮುದ್ರದ ಮೂಲಕ ಕರಾವಳಿ ತೀರ ಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ. ಕಳೆದ ವರ್ಷ ಅಕ್ರಮವಾಗಿ ನೆಲೆಸಿದ್ದ 38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಪತ್ತೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಈ ಬಾರಿಯೂ ಎಚ್ಚರಿಕೆ ವಹಿಸಲಿದೆ- ಎನ್.ಶಶಿಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ