ಮಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ವೈಯಕ್ತಿಕ ಟೀಕೆ ಮಾಡುವುದು ಸರಿಯಲ್ಲ. ವೈಯಕ್ತಿಕ ಟೀಕೆಗಳನ್ನು ಜನರೂ ಒಪ್ಪುವುದಿಲ್ಲ. ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜನರು ಮತ ಚಲಾಯಿಸಲಿದ್ದು, ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜಕೀಯದಲ್ಲಿ ಟೀಕೆಗಳು ಸಹಜ. ಆದರೆ, ವೈಯಕ್ತಿಕ ಟೀಕೆಗಳು ಅವರವರ ವ್ಯಕ್ತಿತ್ವವನ್ನು ಬಿಂಬಿಸುತ್ತವೆ. ವೈಯಕ್ತಿಕ ಟೀಕೆ ಮಾಡಬಾರದು ಎಂಬುದನ್ನು ನಾವು ನಾವೇ ಅರ್ಥಮಾಡಿಕೊಳ್ಳಬೇಕು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಆಗಿಲ್ಲ ಎಂಬ ಕಾಂಗ್ರೆಸ್ ನ ಅಪಪ್ರಚಾರವನ್ನು ಜನತೆ ನಂಬುವುದಿಲ್ಲ. ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಗುರುತಿಸಿ ಮತದಾರರು ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ ಎಂದರು.
ಶನಿವಾರದಿಂದ ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದೇನೆ. ಎರಡೂ ಕಡೆ ಬಿಜೆಪಿ ಗೆಲ್ಲಲಿದೆ ಎಂಬ ಮಾಹಿತಿ ಲಭಿಸಿದೆ ಎಂದು ಅಂಗಾರ ಹೇಳಿದರು.