ಮಂಗಳೂರು: ರಾಜ್ಯದ ಪ್ರತಿ ತಾಲೂಕುಗಳಲ್ಲಿ ಸ್ಕೌಟ್ಸ್ ಭವನ ನಿರ್ಮಾಣವಾಗಬೇಕು ಎಂಬ ನೆಲೆಯಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಹೇಳಿದ್ದಾರೆ.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿ ತಾಲೂಕುಗಳಲ್ಲೂ ಸ್ಕೌಟ್ಸ್ ಭವನ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜ ಮುತುವರ್ಜಿಯಲ್ಲಿ ಸ್ಕೌಟ್ಸ್ ಭವನ ನಿರ್ಮಾಣವಾಗಲಿದೆ. ಮಂಗಳೂರಿನ ಸ್ಕೌಟ್ಸ್ ಭವನವನ್ನು ಕೂಡ ನವೀಕರಣ ಮಾಡುವಲ್ಲಿ ಗಮನಹರಿಸಲಾಗಿದೆ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾಣದ ಅಧ್ಯಕ್ಷರಾಗಿರುವ ಡಾ.ಎಂ.ಮೋಹನ ಆಳ್ವ ಅವರು, ಭಾರತೀಯ ಸ್ಕೌಟ್ಸ್ ಗೈಡ್ಸ್ನ ದ.ಕ ಜಿಲ್ಲಾ ಮುಖ್ಯ ಆಯುಕ್ತರಾಗಿ ಆಯ್ಕೆಯಾದ ಬಳಿಕ ಹಲವಾರು ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿದ್ದಾರೆ. ಸ್ಕೌಟ್ಸ್ ಮತ್ತು ಗೈಡ್ಸ್ಗೆ ಹೊಸ ಆಯಮ ದೊರೆತಿದ್ದು, ಸ್ಕೌಟ್ಸ್ ಭವನ ನಿರ್ಮಾಣದ ನೆಲೆಯಲ್ಲಿಯೂ ಅವರು ವಿಶೇಷ ಮುತುವರ್ಜಿ ವಹಿಸಿದ್ದಾರೆ ಎಂದು ಸಿಂಧ್ಯ ಮೋಹನ್ ಆಳ್ವ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು.
ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳು ಸನ್ನಡತೆಯೊಂದಿಗೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡು ಸತ್ಪ್ರಜೆಗಳಾಗಿ ರೂಪುಗೊಳ್ಳುತ್ತಿದ್ದಾರೆ. ಸ್ಕೌಟ್ಸ್ ಮತ್ತು ಗೈಡ್ಸ್ನಿಂದ ಉತ್ತಮ ಪ್ರಜೆಗಳ ನಿರ್ಮಾಣ ಸಾಧ್ಯ. ಈ ಸಂಸ್ಥೆ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದ ಜೊತೆಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕೊರೋನಾ ಸಂದರ್ಭ ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ, ಸಂಸ್ಥೆಗಳಿಗೆ ೧ ಕೋಟಿ ಮಾಸ್ಕ್ಗಳನ್ನು ವಿತರಿಸುವ ಕಾರ್ಯ ಮಾಡಲಾಗಿದೆ. ೧೦ ಸಾವಿರಕ್ಕೂ ಅಧಿಕ ರೋವರ್ಸ್ ಮತ್ತು ರೇಂಜರ್ಸ್ಗಳು ಕೊರೋನಾ ಸಂದರ್ಭ ವಾರಿಯರ್ರ್ಸ್ಗಳಾಗಿ ಕೆಲಸ ಮಾಡಿದ್ದಾರೆ ಎಂದವರು ಹೇಳಿದರು.
ಭಾರತ್ ಸ್ಕೌಟ್ಸ್ ಆಂಡ್ ಗೈಡ್ಸ್ನ ಡೆಪ್ಯುಟಿ ಇಂಟರ್ನ್ಯಾಷನಲ್ ಕಮಿಷನರ್ ಮಧುಸೂಧನ್ ಎ.ಎಸ್., ರಾಜ್ಯ ಸಂಘಟನಾ ಆಯುಕ್ತ ಎಂ.ಪ್ರಭಾಕರ ಭಟ್ ಉಪಸ್ಥಿತರಿದ್ದರು.
ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ಪುಷ್ಪರಾಜ್ ಬಿ.ಎನ್. ವಂದಿಸಿದರು. ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.