ಬೆಳ್ತಂಗಡಿ: ಪ್ರಕೃತಿ ಚಿಕಿತ್ಸಾ ವೈದ್ಯರು ಗ್ರಾಮೀಣ ಪ್ರದೇಶದ ಜನರಿಗೆ ಸದಾ ಪ್ರೀತಿ-ವಿಶ್ವಾಸದೊಂದಿಗೆ ಉತ್ತಮ ಆರೋಗ್ಯಸೇವೆ ನೀಡಬೇಕು. ಸದಾ ಸಜ್ಜನರಾಗಿ ಸತ್ಕಾರ್ಯವನ್ನೆ ಮಾಡಿ. ಗುರು-ಹಿರಿಯರನ್ನು ಗೌರವಿಸಿ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಸಚಿವ ಎಂ.ಆರ್. ರವಿಕುಮಾರ್ ಹೇಳಿದರು.
ಅವರು ಸೋಮವಾರ ಉಜಿರೆಯಲ್ಲಿ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನಲ್ಲಿ ವಾರ್ಷಿಕೋತ್ಸವ ಹಾಗೂ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದ ಉದ್ಘಾಟನಾಸಮಾರಂಭದಲ್ಲಿ ಶುಭಾಶಂಸನೆ ಮಾಡಿದರು.
ಕರ್ನಾಟಕ ರಾಜ್ಯದ ಭವ್ಯ ಇತಿಹಾಸ ಮತ್ತು ಪರಂಪರೆ ಹಾಗೂ ಶಿಲ್ಪಕಲೆಯಲ್ಲಿ ಜೈನಧರ್ಮ ಮತ್ತು ಭೌದ್ಧಧರ್ಮದ ಗಾಢ ಪ್ರಭಾವ ಇದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಆರೋಗ್ಯ, ಶಿಕ್ಷಣ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಮಾಡಿದ ಅನುಪಮ ಸೇವೆಗೆ ಅಭಿನಂದಿಸಿದರು. ಉಜಿರೆಯಲ್ಲಿರುವ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜು ಹಾಗೂ ಶಾಂತಿವನದಲ್ಲಿರುವ ಪ್ರಕೃತಿಚಿಕಿತ್ಸಾ ಆಸ್ಪತ್ರೆ ದೇಶಕ್ಕೆ ಆದರ್ಶ ಹಾಗೂ ಮಾದರಿಯಾಗಿದೆ ಎಂದರು.
ಆಸ್ಪತ್ರೆ ಮತ್ತು ಕಾಲೇಜಿನ ಪ್ರಗತಿಗೆ ವಿಶ್ವವಿದ್ಯಾಲಯದ ವತಿಯಿಂದ ಪೂರ್ಣ ಸಹಕಾರ ಮತ್ತು ಪ್ರೋತ್ಸಾಹ ನೀಡುವುದಾಗಿ ಅವರು ಭರವಸೆ ನೀಡಿದರು. ಕಾಲೇಜಿನಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ ಮಾಡಿದ
ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಧರ್ಮಸ್ಥಳದಲ್ಲಿ ಶಾಂತಿವನದಲ್ಲಿ ಹಾಗೂ ಮಣಿಪಾಲದ ಬಳಿ ಪರೀಕಾದಲ್ಲಿ ಈಗಾಗಲೆ ಎರಡು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗಳು ಆರೋಗ್ಯಸೇವೆ ನೀಡುತ್ತಿದ್ದು ಬೆಂಗಳೂರಿನಲ್ಲಿ ನೆಲಮಂಗಲದಲ್ಲಿ ಇನ್ನೊಂದು ಹೊಸ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಜೂನ್ ತಿಂಗಳ ಎರಡನೆ ವಾರದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಪ್ರಕಟಿಸಿದರು.
ಸಾವಿರಾರು ವರ್ಷಗಳಿಂದ ಭಾರತದಲ್ಲಿ ಪ್ರಚಲಿತವಿದ್ದ ಆಯುರ್ವೇದ, ಪ್ರಕೃತಿಚಿಕಿತ್ಸಾ ಪದ್ಧತಿ ಮತ್ತು ಯೋಗಾಭ್ಯಾಸ ಇಂದು ಜಾಗತಿಕ ಮಟ್ಟದಲ್ಲಿ ಜನಪ್ರಿಯವಾಗಿ ಮಾನ್ಯತೆಯನ್ನು ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ಮಾನವೀಯ ಮೌಲ್ಯಗಳೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಪ್ರೊ. ಜ್ಯೋಸ್ನಾ ಕಾಲೇಜಿನ ವರದಿಯನ್ನು ಸಾದರಪಡಿಸಿದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಕಾರ್ಯದರ್ಶಿ ಡಾ. ಸತೀಶ್ಚಂದ್ರ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಚಾರ್ಯ ಡಾ. ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಯೋಗ ವಿಭಾಗದ ಡೀನ್ ಡಾ. ಶಿವಪ್ರಸಾದ್ ಶೆಟ್ಟಿ, ಧನ್ಯವಾದವಿತ್ತರು. ಡಾ. ಅನನ್ಯಾ ಕಾರ್ಯಕ್ರಮ ನಿರ್ವಹಿಸಿದರು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆಶ್ರಯದಲ್ಲಿ ಮಂಗಳವಾರದಿಂದ 5 ದಿನ ನಡೆಯುವ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಲಾಯಿತು.
ರಾಜ್ಯದ ವಿವಿಧ ಕಾಲೇಜುಗಳಿಂದ 96 ತಂಡಗಳು ಪಂದ್ಯಾಟದಲ್ಲಿ ಭಾಗವಹಿಸುತ್ತಿವೆ.