ಮಂಗಳೂರು:- ಕರಾಟೆ ಕೇವಲ ಒಂದು ದೈಹಿಕ ಶಿಕ್ಷಣವಲ್ಲ ಅದು ಶಿಸ್ತಿನ ಮೂಲ, ವಿದ್ಯಾರ್ಥಿಗಳು ಅದನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವಂತೆ ಅಲೆಮಾರಿ/ಅರೆಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಅವರು ಕರೆ ನೀಡಿದರು.
ಅವರು ಫೆ.8ರ ಮಂಗಳವಾರ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಹಯೋಗದಲ್ಲಿ ನಗರದ ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಓಬವ್ವ ಆತ್ಮರಕ್ಷಣಾ ಕೌಶಲ್ಯಗಳ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಶತಮಾನಗಳ ಹಿಂದೆ ಇಂದಿನ ಚಿತ್ರದುರ್ಗದಲ್ಲಿದ್ದ ವೀರ ವನಿತೆ ಓಬವ್ವ ಶತ್ರುಗಳನ್ನು ಸಂಹರಿಸಿ, ಕೋಟೆಯನ್ನು ರಕ್ಷಿಸಿದ್ದು ಇತಿಹಾಸ, ಅವರ ಹೆಸರು ಇಂದಿಗೂ ಚಿರಸ್ಥಾಯಿಯಾಗಿ ಉಳಿದಿದೆಯೋ ಹಾಗೆಯೇ ಇಂದಿನ ಯುವತಿಯರೂ ಕೂಡ ಆತ್ಮರಕ್ಷಣೆಗಾಗಿ ಮತ್ತು ಸಮಾಜದಲ್ಲಿ ನಿರ್ಭಯವಾಗಿ ಬದುಕಲು ಕರಾಟೆಯನ್ನು ಅಭ್ಯಾಸ ಮಾಡಬೇಕು ಎಂದು ಹೇಳಿದರು.
ಜಿಲ್ಲೆಯ ವಿವಿಧ ವಸತಿ ನಿಲಯದಲ್ಲಿನ ಒಟ್ಟು 3761 ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಓಬವ್ವ ಆತ್ಮರಕ್ಷಣಾ ಕಲೆ ಕುರಿತು ವಿದ್ಯಾರ್ಥಿನಿಯರು ಪ್ರಾತ್ಯಕ್ಷಿಕೆ ನೀಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಚಿನ್ ಕುಮಾರ್, ಯುವಜನ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಪ್ರದೀಪ್ ಡಿ’ಸೋಜ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಸಿದ್ದೇಶ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸುನಿತಾ, ಹಿಂದುಳಿದ ವರ್ಗಗಳ ತಾಲೂಕು ಅಧಿಕಾರಿ ಮಹಾಲಕ್ಷ್ಮಿ, ವಸತಿ ನಿಲಯದ ವಿದ್ಯಾರ್ಥಿನಿಯರು ಹಾಗೂ ಇತರರು ಉಪಸ್ಥಿತರಿದ್ದರು.