ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಹಿಜಾಬ್ ಪ್ರಕರಣದ ವರದಿಗೆ ತೆರಳಿದ ಪತ್ರಕರ್ತರಿಗೆ ದಿಗ್ಬಂಧನ ಹಾಕಿ ವಿಡಿಯೋ ತುಣುಕುಗಳನ್ನು ಡಿಲೀಟ್ ಮಾಡಿದ್ದಲ್ಲದೆ ಜೀವ ಬೆದರಿಕೆ ಒಡ್ಡಿರುವ ಪ್ರಕರಣವನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.
ಕಾಲೇಜಿಗೆ ಪತ್ರಕರ್ತರು ವಾಸ್ತವ ವರದಿ ಮಾಡಲು ತೆರಳಿದಾಗ ವಿದ್ಯಾರ್ಥಿಗಳು ದುವರ್ತನೆ ತೋರಿಸಿದ್ದಾರೆ. ತಪ್ಪಿತಸ್ಥ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೆಗೊಳ್ಕಬೇಕು. ಈ ರೀತಿಯ ಘಟನೆಗಳು ಮರುಕಳಿಸದಂತೆ ಸರಕಾರ ಪತ್ರಕರ್ತರಿಗೆ ಸೂಕ್ತ ಭದ್ರತೆ ನೀಡಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದ್ದಾರೆ.
ಘಟನಾವಳಿಗೆ ಸಂಬಂಧಿಸಿದಂತೆ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ತಪ್ಪಿತಸ್ಥತರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
ನಾಳೆ ಮನವಿ:
ಪತ್ರಕರ್ತರ ಹಲ್ಲೆಯನ್ನು ಖಂಡಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಜೂ. 3ರಂದು ಬೆಳಗ್ಗೆ 10.30ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದೆಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೃ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದ್ದಾರೆ.