ಮಂಗಳೂರು : ನಗರದ ಅತ್ತಾವರದ ನಂದಿಗುಡ್ಡೆ ಬಳಿ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಅಪ್ರಾಪ್ತ ವಯಸ್ಕ ಪಿಯುಸಿ ವಿದ್ಯಾರ್ಥಿನಿಯರು ಸಹಿತ ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿದ್ದು,ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿರುವುದಾಗಿ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಗುರುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮಹಿಳಾ ಮತ್ತು ಕಲ್ಯಾಣ ಇಲಾಖೆ, ನಗರದ ಕಾಲೇಜೊಂದರ ಮುಖ್ಯಸ್ಥೆ ಮತ್ತು ಸಂತ್ರಸ್ತೆ ನೀಡಿದ ದೂರಿನ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹಲವು ದಿನಗಳಿಂದ ದಂಧೆ ನಡೆಸುತ್ತಿದ್ದ ಮಹಿಳೆಯರು ಮತ್ತು ಪುರುಷನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೋಕ್ಸೋ ಸೇರಿ ಇತರ ಕಾಯಿದೆಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ತಿಳಿಸಿದರು. ವಯಸ್ಕ ಯುವತಿಯರನ್ನು ನಿರಂತರವಾಗಿ ದಂಧೆಗೆ ಬಳಸಿಕೊಳ್ಳುತ್ತಿರುವುದು ತನಿಖೆ ವೇಳೆ ಕಂಡು ಬಂದಿದೆ ಎಂದು ತಿಳಿಸಿದರು.
ವಿದ್ಯಾರ್ಥಿನಿಯರಿಗೆ ಬೆದರಿಕೆ
ರಕ್ಷಣೆ ಮಾಡಲಾದ ಸಂತ್ರಸ್ತೆಯರು ಪಿಯುಸಿ ವಿದ್ಯಾರ್ಥಿನಿಯರಾಗಿದ್ದು, ತಮ್ಮ ಮೇಲಾದ ದೌರ್ಜನ್ಯವನ್ನು ಕಾಲೇಜಿನ ಮುಖ್ಯಸ್ಥೆಯ ಬಳಿ ತೋಡಿಕೊಂಡಿದ್ದಾರೆ. ವೇಶ್ಯಾವಾಟಿಕೆ ನಡೆಸಲಾಗುತ್ತಿದ್ದ ಮನೆಯಲ್ಲಿ ಸಿಸಿಟಿವಿ ಅಳವಡಿಸಿದ್ದು, ವಿದ್ಯಾರ್ಥಿನಿಯರಿಗೆ ವಿಡಿಯೋ ಬಯಲು ಮಾಡಿ ಮಾನ ಹರಾಜು ಹಾಕುವುದಾಗಿ ಬೆದರಿಕೆ ಹಾಕಿ ಹೀನ ಕೃತ್ಯಕ್ಕೆ ಬಳಸಿಕೊಳ್ಳಲಾಗುತ್ತಿತ್ತು ಎಂದು ತಿಳಿಸಿದ್ದಾರೆ.
ಕೇರಳ ಮೂಲದ ಗ್ರಾಹಕರು ಸೇರಿದಂತೆ ಸ್ಥಳೀಯರೂ ಇಲ್ಲಿ ಗ್ರಾಹಕರಾಗಿ ಬರುತ್ತಿದ್ದರು ಎಂದು ತಿಳಿಸಿದರು. ಕೇರಳ ಮೂಲದ ಯುವತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಮಹಿಳಾ ಪೊಲೀಸ್ ಠಾಣೆಯ ಸಖಿ ಕೇಂದ್ರದಲ್ಲಿ ಬಾಲಕಿಯರಿಗೆ ಕೌನ್ಸಲಿಂಗ್ ಮಾಡಲಾಗುತ್ತಿದೆ ಎಂದು ತಿಳಿಸಿದರು. ಪ್ರಕರಣಕ್ಕೆ ಸಂಬಂಧಿಸಿ ಗಂಭೀರವಾಗಿ, ಸಿಸಿಬಿ ಮೂಲಕ ಆಳವಾದ ತನಿಖೆ ನಡೆಸುವುದಾಗಿ ತಿಳಿಸಿದರು.