ಮಂಗಳೂರು : ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ.2 ರಿಂದ ನವೆಂಬರ್ 14 ರವರೆಗೆ ನಿರಂತರ ಕಾನೂನು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಪ್ರತಿಯೊಬ್ಬರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಮುರಳಿಧರ್ ಪೈ ತಿಳಿಸಿದ್ದಾರೆ.
ಮಂಗಳೂರಿನ ನ್ಯಾಯಲಯ ಸಂಕೀರ್ಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾನೂನು ಸೇವ ಪ್ರಾಧಿಕಾರದ ವತಿಯಿಂದ ಕಾನೂನು ಅರಿವು ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಪ್ರತಿಯೊಬ್ಬರಿಗೂ ಕಾನೂನು ಸೇವೆಗಳ ಬಗ್ಗೆ ಅರಿವು ಮೂಡಿಸುವ ಕಾರಣದಿಂದ ಈ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪೃಥ್ವಿರಾಜ್ ವರ್ಣೇಕರ್, ಗ್ರಾಮೀಣ ಭಾಗದಲ್ಲಿರುವ ಜನರಿಗೆ ಹೆಚ್ಚಾಗಿ ಕಾನೂನು ಸೇವೆಗಳ ಕುರಿತು ಹೆಚ್ಚಿನ ಮಟ್ಟದಲ್ಲಿ ಅರಿವು ಇರುವುದಿಲ್ಲ ಆದ್ದರಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಜಾಗೃತಿ ಮೂಡಿಸುವುದರಿಂದ ಸಂಪೂರ್ಣ ಸೇವೆಗಳನ್ನು ಒದಗಿಸಿದಂತೆ ಆಗುತ್ತದೆ ಎಂದರು. ಸಾರ್ವಜನಿಕರಿಗೆ ಇರುವ ಹಕ್ಕು ಹಾಗೂ ಪರಿಹಾರದ ಬಗ್ಗೆ ವಂಚಿತರಾಗದೇ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದರು.