ಬೆಳ್ತಂಗಡಿ : ಮೂರನೇ ಅಲೆ ಬಗ್ಗೆ ವಿಶೇಷ ಮುನ್ನೆಚ್ಚರಿಕೆಯನ್ನು ಜನರು ಕೈಗೊಳ್ಳಬೇಕಾಗಿದೆ. ಪಾಸಿಟಿವ್ ಪ್ರಕರಣಗಳು ಹೆಚ್ಚಾಗದಂತೆ ಸರಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ ಎಂದು ಉಸ್ತುವಾರಿ ಸಚಿವ ಅಂಗಾರ ಹೇಳಿದರು.
ಅವರು ಶನಿವಾರ ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿರುವ ಉಜಿರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೋವಿಡ್ 19 ಕಾರ್ಯಪಡೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ,ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ಮಾತನಾಡಿದರು.
ಆರೋಗ್ಯ ಕಾರ್ಯಕರ್ತರಿಗೆ ಯಾವುದೇ ರೀತಿಯ ಸಮಸ್ಯೆಗಳು ಕಂಡು ಬಂದರೆ ಕೂಡಲೇ ಗಮನಕ್ಕೆ ತರಬೇಕು. ಮಾಸ್ಕ್,ಗ್ಲವ್ಸ್ ಇತ್ಯಾದಿ ಮುನ್ನೆಚ್ಚರಿಕೆಗೆ ಬೇಕಾದ ಗುಣಮಟ್ಟದ ಸಾಮಗ್ರಿಗಳನ್ನು ಸ್ಥಳೀಯವಾಗಿ ವ್ಯವಸ್ಥೆ ಮಾಡಿಕೊಳ್ಳಬೇಕು. ಇವುಗಳಿಗೆ ಯಾವುದೇ ರೀತಿಯ ಕೊರತೆ ಉಂಟಾಗದಂತೆ ಆರೋಗ್ಯ ಇಲಾಖೆ ಗಮನಹರಿಸಬೇಕು. ತಾಲೂಕಿನಲ್ಲಿ ಗಂಟಲ ಸ್ರಾವ ಪರೀಕ್ಷೆಗಳನ್ನು ಹೆಚ್ಚಿಸಿ ಅಲ್ಲಲ್ಲಿ ಲಸಿಕೆ ಶಿಬಿರವನ್ನು ಆಯೋಜಿಸಬೇಕು.ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
ಕೋವಿಡ್ ಪ್ರಥಮ ಅಲೆಯ ಸಂದರ್ಭ ಜನರಲ್ಲಿ ಭಯ ಇತ್ತು, ಎರಡನೇ ಅಲೆಯಲ್ಲಿ ಜನರ ನಿರ್ಲಕ್ಷ ಅಧಿಕವಾದ ಕಾರಣ ಪ್ರಕರಣಗಳ ಸಂಖ್ಯೆ ಹೆಚ್ಚಿದೆ.
ಈ ಬಾರಿ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 206 ಮನೆಗಳಲ್ಲಿ 496 ಪ್ರಕರಣಗಳು ವರದಿಯಾಗಿದ್ದು ಪ್ರಸ್ತುತ 22 ಮನೆಗಳಲ್ಲಿ 40 ಸಕ್ರಿಯ ಪ್ರಕರಣಗಳಿವೆ. ಆರೋಗ್ಯ ಇಲಾಖೆಯ ಕಾರ್ಯ ತಂಡದೊಂದಿಗೆ 29 ಅಂಗನವಾಡಿ 21 ಆಶಾ ಕಾರ್ಯಕರ್ತೆಯರು ಸೇವೆ ಸಲ್ಲಿಸುತ್ತಿದ್ದಾರೆ.
ಮಾಧ್ಯಮದ ಜತೆ ಮಾತನಾಡಿದ ಸಚಿವ ಅಂಗಾರ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚು ಇರುವ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆ ಹಾಗೂ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಲಾಗುತ್ತಿದೆ. ಭಾನುವಾರ ಸುಳ್ಯ ತಾಲೂಕಿನ ಗಡಿಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಲಾಗುವುದು. ಜಿಲ್ಲೆಯಲ್ಲಿ ಲಾಕ್ ಡೌನ್,ಕರ್ಫ್ಯೂ ಮುಂದುವರಿಸುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸ್ವಾತಂತ್ರ್ಯ ದಿನಾಚರಣೆಯ ಬಳಿಕ ಜಿಲ್ಲಾಮಟ್ಟದ ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಹೇಳಿದರು.
ಶಾಸಕ ಹರೀಶ್ ಪೂಂಜ ಕೋವಿಡ್ ಕಾರ್ಯಪಡೆಗೆ ಸಲಹೆ ಸೂಚನೆಗಳನ್ನು ನೀಡಿದರು. ಎಂ ಎಲ್ ಸಿ ಪ್ರತಾಪಸಿಂಹ ನಾಯಕ್, ತಹಸೀಲ್ದಾರ್ ಮಹೇಶ್ ಜೆ, ತಾಪಂ ಸಿಇಒ ಕುಸುಮಾಧರ, ತಾಲೂಕು ವೈದ್ಯಾಧಿಕಾರಿ ಡಾ. ಕಲಾಮಧು,ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು ಮತ್ತಿತರರು ಉಪಸ್ಥಿತರಿದ್ದರು.