ಬಂಟ್ವಾಳ: ಪ್ರಧಾನಿ ಮೋದಿಯವರ ನಾಯಕತ್ವದ ಕಾರಣಕ್ಕೆ ಭಾರತ ಇಂದು ಬಲಿಷ್ಠವಾಗಿ ನಿಂತಿದ್ದು, ಪಕ್ಷದ ಸಿದ್ಧಾಂತಕ್ಕೆ ಬದ್ಧವಾಗಿ ಸೂಚನೆ ಪಾಲಿಸಿಕೊಂಡು ಕೆಲಸ ಮಾಡಿದಾಗ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
ಅವರು ಬಿ.ಸಿ.ರೋಡಿನ ಶಿವಳ್ಳಿ ಸಭಾಭವನದಲ್ಲಿ ಬಂಟ್ವಾಳ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಸಭೆಯನ್ನು ಉದ್ಘಾಟಿಸಿದರು.
ಒಬಿಸಿ ಸಮುದಾಯದ ಬಹುತೇಕ ಮಂದಿ ಬಿಜೆಪಿಯ ಮತದಾರರಾಗಿದ್ದು, ಹೀಗಾಗಿ ಮೋರ್ಚಾ ಪಕ್ಷಕ್ಕೆ ದೊಡ್ಡ ಕೊಡುಗೆಯನ್ನು ನೀಡುತ್ತಿದೆ. ಯುಪಿಯಲ್ಲಿಯೂ ಒಬಿಸಿ ಮತದಾರರು ಬಿಜೆಪಿ ಪರ ನಿಂತ ಕಾರಣಕ್ಕೆ ಅಧಿಕಾರಕ್ಕೆ ಬರಲು ಸಾಧ್ಯವಾಯಿತು. ಮೋರ್ಚಾಗಳು ಯಶಸ್ವಿಯಾಗಿ ಕೆಲಸ ಮಾಡಿದಾಗ ಪಕ್ಷ ಬಲಿಷ್ಠಗೊಳ್ಳಲು ಸಾಧ್ಯವಾಗಿದೆ.
ಕಾರ್ಯಕರ್ತರಿಗೆ ಬೆಂಬಲವಾಗಿ ನಿಲ್ಲುವ ಕುಟುಂಬಕ್ಕಾಗಿ ಬಂಟ್ವಾಳದಲ್ಲಿ ಕುಟುಂಬ ಮಿಲನ ಕಾರ್ಯಕ್ರಮ ಮಾಡಿ ಯಶಸ್ವಿಯಾಗಿದೆ ಎಂದುಅವರು ಹೇಳಿದರು.
ವೇದಿಕೆಯಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ, ರಾಜ್ಯ ಕಾರ್ಯದರ್ಶಿ ವಿಠಲ ಪೂಜಾರಿ, ಕಾರ್ಯಕಾರಿಣಿ ಸದಸ್ಯ ಕುಮಾರ್ ರಾಮಚಂದ್ರಪ್ಪ, ಪ್ರಭಾರಿ ರಾಜೇಶ್ ಪಿಲಾರ್, ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮೋನಪ್ಪ ದೇವಸ್ಯ, ಮಹೇಶ್, ಉದಯಕುಮಾರ್, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಉಪಸ್ಥಿತರಿದ್ದರು.
ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣ್ ಪ್ರಸ್ತಾವನೆಗೈದರು. ಬಂಟ್ವಾಳ ಒಬಿಸಿ ಮೋರ್ಚಾ ಅಧ್ಯಕ್ಷ ಆನಂದ ಶಂಭೂರು ಸ್ವಾಗತಿಸಿದರು. ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು.