ಮಂಗಳೂರು : ದೇಶದ ಸೇನಾ ಮುಖ್ಯಸ್ಥರು, ಯೋಧರು ಮೃತಪಟ್ಟಾಗ ಸಂಭ್ರಮಾಚರಣೆ ನಡೆಸಿ, ವಿಕೃತವಾಗಿ ವರ್ತಿಸಿದವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಸೈನಿಕರ ಮರಣವನ್ನು ಸಂಭ್ರಮಿಸಿದವರ ವಿರುದ್ಧ ಪ್ರಕರಣ ದಾಖಲಿಸಿ, ಅವರನ್ನು ಬಂಸಿ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ನಗರದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನ ಆವರಣದಲ್ಲಿ ಸೋಮವಾರ ನಡೆದ ‘ಶ್ರೀ ಕಾಶಿ ವಿಶ್ವನಾಥ ಧಾಮದ ಲೋಕಾರ್ಪಣೆ – ದಿವ್ಯ ಕಾಶಿ ಭವ್ಯ ಕಾಶಿ’ ಸಮಾರಂಭದ ನೇರ ಪ್ರಸಾರ ವೀಕ್ಷಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಮತಾಂತರ ನಿಷೇಧ ವಿಧೇಯಕ ಜಾರಿಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಆಶೆ, ಆಮಿಷಗಳನ್ನು ಒಡ್ಡಿ ಮತಾಂತರ ನಡೆಸುವುದಕ್ಕೆ ನಮ್ಮ ವಿರೋಧವಿದೆ. ಲವ್ ಜಿಹಾದ್ ನಡೆಯುತ್ತಿರುವುದು ನಿಜ ಎಂದು ಕೇರಳದಲ್ಲಿ ನ್ಯಾಯಾಲಯಗಳೇ ಹೇಳಿವೆ. ಲವ್ ಜಿಹಾದ್ ವಿರುದ್ಧವೂ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಮಾತುಕತೆ ನಡೆಸುತ್ತೇನೆ ಎಂದರು.