ಮಂಗಳೂರು : ನಗರ ಪೊಲೀಸರು ಫೆ.21ರ ಸೋಮವಾರ ಬೆಳಗ್ಗೆ ನಗರದಲ್ಲಿ ಪಥಸಂಚಲನ ನಡೆಸಿದರು.
ಪೊಲೀಸ್ ಕಮಿಷನರ್ ಎನ್. ಶಶಿ ಕುಮಾರ್ ನೇತೃತ್ವದಲ್ಲಿ ನಗರದ ಬಳ್ಳಾಲ್ಬಾಗ್ನಿಂದ ಬೆಳಿಗ್ಗೆ 8 ಗಂಟೆಗೆ ಆರಂಭವಾದ ಪಥಸಂಚಲನ ಪಿವಿಎಸ್, ಎಂಜಿ ರಸ್ತೆ, ಅಂಬೇಡ್ಕರ್ ವೃತ್ತ, ಹಂಪನಕಟ್ಟೆ ಸೇರಿದಂತೆ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕೊನೆಗೊಂಡಿತು.
ಶಿವಮೊಗ್ಗದಲ್ಲಿ ಭಾನುವಾರ ಫೆ.20ರಂದು ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಹಾಗೂ ರಾಜ್ಯಾದ್ಯಂತ ನಡೆಯುತ್ತಿರುವ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ನಾಗರಿಕರಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಪಥಸಂಚಲನ ನಡೆಸಲಾಯಿತು.
ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ನಡೆಯುತ್ತಿರುವ ಸೂಕ್ಷ್ಮ ಬೆಳವಣಿಗೆಗಳಿಂದ ಜನರು ಗೊಂದಲ ಮತ್ತು ಆತಂಕಕ್ಕೆ ಒಳಗಾಗಿರುವ ಕಾರಣ ನಾಗರಿಕರಿಗೆ ನೈತಿಕ ಸ್ಥೈರ್ಯ ತುಂಬುವ ಸಲುವಾಗಿ ಹಾಗೂ ಶಾಲಾ ಕಾಲೇಜುಗಳ ಪರಿಸರದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಪಥಸಂಚಲನವನ್ನು ಆಯೋಜಿಸಲಾಗಿತ್ತು ಎಂದು ಪೊಲೀಸ್ ಕಮಿಷನರ್ ಎನ್. ಶಶಿ ಕುಮಾರ್ ನ್ಯೂಸ್ ಕನ್ನಡಕ್ಕೆ ತಿಳಿಸಿದರು.
ಪಥಸಂಚಲನದ ಅರಿವು ಇಲ್ಲದೇ ಮಂಗಳೂರು ನಗರದ ಬಹುತೇಕ ಕಡೆಗಳಲ್ಲಿ ಬೆಳಿಗ್ಗೆ ಸಂಚಾರ ದಟ್ಟಣೆ ಉಂಟಾಯಿತು. ಅನೇಕ ಕಡೆಗಳಲ್ಲಿ ಪಥ ಸಂಚಲನದ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಬದಲಾವಣೆ ಕೂಡಾ ಮಾಡಲಾಗಿತ್ತು.