ಮಂಗಳೂರು : ವೇಶ್ಯಾವಾಟಿಕೆ ದಂಧೆ ಮಾಡ್ತಿದ್ದ ಆರೋಪದಡಿಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನುಅಬ್ದುಲ್ ಹಫೀಸ್. ರಮ್ಲತ್ ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾವೂರು ಕಟ್ಟೆ ಪರಿಸರದ ಬಾಡಿಗೆ ಮನೆಯೊಂದರಲ್ಲಿ ಅಕ್ರಮ ಲಾಭ ಗಳಿಸುವ ಸಮಾನ ಉದ್ದೇಶದಿಂದ ಬೆಂಗಳೂರು , ಮಂಗಳೂರು, ಮೈಸೂರು, ಉಡುಪಿ ಹಾಗೂ ಇತರ ಕಡೆಗಳಲ್ಲಿನ ಯುವತಿಯರನ್ನು/ಮಹಿಳೆಯರನ್ನು ಮಾನವ ಕಳ್ಳಸಾಗಾಟ ಮೂಲಕ ಮಂಗಳೂರಿಗೆ ಕರೆಯಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.
ಕಾರ್ಯಾಚರಣೆ ವೇಳೆ ವೇಶ್ಯಾವಾಟಿಕೆ ದಂಧೆಯಲ್ಲಿ ನಿರತರಾಗಿದ್ದ ಇಬ್ಬರನ್ನು ದಸ್ತಗಿರಿ ಮಾಡಿ ವೇಶ್ಯಾವಾಟಿಕೆ ದಂಧೆಯಲ್ಲಿ ನಿರತಳಾಗಿದ್ದ ಒಬ್ಬಳು ಸಂತ್ರಸ್ತೆಯನ್ನು ರಕ್ಷಿಸಲಾಗಿದೆ. ದಸ್ತಗಿರಿ ಮಾಡಿದ ಆರೋಪಿಗಳಿಂದ 10,060 ನಗದು, 3 ಮೊಬೈಲ್ ಮತ್ತು ಸ್ಕಾರ್ಪಿಯೋ ಕಾರು ಹೀಗೆ ಒಟ್ಟು 3,25,560 ಮೊತ್ತದ ಸೊತ್ತನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.