ಮಂಗಳೂರು : ಅನಾರೋಗ್ಯದಿಂದ ನಗರದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ ಅವರ ಆಸ್ಪತ್ರೆ ಖರ್ಚು ವೆಚ್ಚಗಳನ್ನು ಸರ್ಕಾರದಿಂದ ಭರಿಸುವುದಾಗಿ ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಕಟಿಸಿದರು.
ಅವರು ಮೇ.10ರ ಮಂಗಳವಾರ ನಗರದ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಐಸಿಯುನಿಂದ ಜನರಲ್ ವಾರ್ಡ್ ಗೆ ಶಿಫ್ಟ್ ಆಗಿರುವ ಸುಕ್ರಿ ಬೊಮ್ಮಗೌಡ ಅವರ ಆರೋಗ್ಯವನ್ನು ವಿಚಾರಿಸಿ, ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಸುಕ್ರಿ ಬೊಮ್ಮಗೌಡ ಅವರ ಆರೋಗ್ಯದ ಬಗ್ಗೆ ವಿಶೇಷ ಆಸ್ಥೆ ವಹಿಸಿದ್ದು, ಅವರ ಆರೋಗ್ಯವನ್ನು ವಿಚಾರಿಸುವಂತೆ ಸೂಚನೆ ನೀಡಿದ್ದರು ಹಾಗೂ ಅವರ ಆಸ್ಪತ್ರೆ ಖರ್ಚು ವೆಚ್ಚಗಳನ್ನು ಸರ್ಕಾರದಿಂದ ಭರಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಯವರ ಸಂದೇಶವನ್ನು ಸುಕ್ರಿ ಬೊಮ್ಮಗೌಡ ಅವರಿಗೆ ತಿಳಿಸಲಾಯಿತು ಎಂದರು.
ಈ ಸಂದರ್ಭದಲ್ಲಿ ಸಚಿವರೊಂದಿಗೆ ಮಾತನಾಡಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ ಅವರು ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು ವೈದ್ಯರು ಉತ್ತಮವಾಗಿ ಚಿಕಿತ್ಸೆ ನೀಡಿದ್ದಾರೆ, ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಮನೆಗೆ ಹೋಗುವುದಾಗಿ ತಿಳಿಸಿ, ಸಚಿವರು ಹಾಗೂ ಸಂಬಂಧಿಸಿದ ವರೆಲ್ಲರೂ ತಮ್ಮ ಮನೆಗೆ ಭೇಟಿ ನೀಡುವಂತೆ ಈ ಸಂದರ್ಭದಲ್ಲಿ ಸಚಿವರನ್ನು ಕೋರಿದರು.
ಆಸ್ಪತ್ರೆಯ ವೈದ್ಯರು, ಸುಕ್ರಿ ಬೊಮ್ಮಗೌಡ ಅವರ ಸಂಬಂಧಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.