ಬಂಟ್ವಾಳ: ತನ್ನ ಕ್ಷೇತ್ರದ ಜನಸಾಮಾನ್ಯರಿಗೂ ಗುಣಮಟ್ಟದ ಆರೋಗ್ಯ ಸೇವೆ ನೀಡಬೇಕೆಂಬ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಯನ್ನು ಮೀರಿಸುವ ರೀತಿಯಲ್ಲಿ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆ ನಿರ್ಮಾಣವಾಗಲು ಕಾರಣವಾದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಅಭಿನಂದನೆಗಳು ಎಂದು ಸಂಸದ ನಳಿನ್ ಕುಮಾರ್ ಕಟೀಲುಅವರು ಹೇಳಿದರು.
ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ 1.67 ಕೋಟಿ ವೆಚ್ಚದಲ್ಲಿ ನೂತನ ವಾಗಿ ನಿರ್ಮಾಣ ಮಾಡಲಾದ 24 ಹಾಸಿಗೆಯ ಐಸಿಯು ಘಟಕವನ್ನು ಶುಕ್ರವಾರ ಲೋಕಾರ್ಪಣೆಗೈದು ಅವರು ಮಾತನಾಡಿದರು.
ಗ್ರಾಮೀಣ ಭಾಗದ ಬಡವರಿಗೆ ಅನುಕೂಲವಾಗುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಕೆಲಸ ಮಾಡಲಾಗಿದೆ. ಇಚ್ಛಾಶಕ್ತಿ ಇದ್ದಾಗ ಸರಕಾರಿ ಆಸ್ಪತ್ರೆಯನ್ನು ಯಾವ ರೀತಿಯಲ್ಲಿ ಗುಣಮಟ್ಟದ ಆಸ್ಪತ್ರೆಯಾಗಿ ಬದಲಾವಣೆ ಮಾಡಬಹುದು ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದರು.
ತಾಲೂಕು ಮಟ್ಟದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸುವ ಯೋಜನೆಯನ್ನು ಕೇಂದ್ರ ಸರಕಾರ ಮಾಡುತ್ತಿದೆ.ಎಲ್ಲಾ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಯ ಶೈಲಿಯಲ್ಲಿ ನಿರ್ಮಿಸಿ, ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಯೋಜನೆ ಗಳನ್ನು ಕೇಂದ್ರ ಸರಕಾರ ಮಾಡುತ್ತಿದೆ ಎಂದು ಅವರು ಹೇಳಿದರು.
ನಡೆದ ಸರಳ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು,ಆರೋಗ್ಯ ಮತ್ತು ಶಿಕ್ಷಣಕ್ಕೆ ಕೇಂದ್ರ ಸರಕಾರ ಹೆಚ್ಚು ಒತ್ತು ನೀಡುತ್ತಿದೆ.ಬಂಟ್ವಾಳ ತಾಲೂಕು ಆರೋಗ್ಯ ಕೇಂದ್ರವನ್ನು ಸುಸಜ್ಜಿತ ರೀತಿಯಲ್ಲಿ ನಿರ್ಮಾಣ ಮಾಡಲಾಗಿದ್ದು,ಬಾಕಿರುವ ಕೆಲವು ಸಣ್ಣ ಪುಟ್ಟ ಕೆಲಸಗಳನ್ನು ಕೂಡ ಶೀಘ್ರವಾಗಿ ಮಾಡುವ ಭರವಸೆ ನೀಡಿದರು.
ಆರೋಗ್ಯ ಇಲಾಖೆಯ ಸಮಿತಿ ಹಾಗೂ ವೈದ್ಯರ ಸಹಕಾರದಿಂದ ಆಸ್ಪತ್ರೆಯ ಅಭಿವೃದ್ಧಿಗೆ ಕಾರಣವಾಯಿತು ಎಂದ ಅವರು ಅಭಿನಂದನೆ ಸಲ್ಲಿಸಿದ ಅವರು ಪುಂಜಾಲಕಟ್ಟೆ ಆರೋಗ್ಯ ಕೇಂದ್ರವು 10 ಕೋ.ರೂ.ವೆಚ್ಚದಲ್ಲಿ ಮೇಲ್ದರ್ಜೆಗೇರಲಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಕಿಯೋನಿಕ್ಸ್ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್, ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ, ಮಾಜಿ ಜಿ.ಪಂ.ಸದಸ್ಯರಾದ ಎಂ.ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ,ಕಮಾಲಾಕ್ಷಿ ಪೂಜಾರಿ,ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ವಜ್ರನಾಭ ಕಲ್ಲಡ್ಕ, ವಿಶ್ವನಾಥ ಚೆಂಡ್ತಿಮಾರ್, ಸಂದೀಪ್ ಎಸ್.ಆರ್,ರಜನಿ ಚಿಕ್ಕಯ್ಯಮಠ, ಸುರೇಶ್ ಕೋಟ್ಯಾನ್, ಗಣೇಶ್ ರೈ ಮಾಣಿ, ಮಾಧವಮಾವೆ,ನಂದರಾಮ ರೈ,ರಮಾನಾಥ ರಾಯಿ,ಪುರುಷೋತ್ತಮ ಶೆಟ್ಟಿ ವಾಮದಪದವು, ಡಿ.ಎಚ್.ಒ ಡಾ.ಕಿಶೋರ್,
ತಹಶೀಲ್ದಾರ್ ಡಾ. ಸ್ಮಿತಾ ರಾಮು, ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಪುಷ್ಪಲತಾ,ಟಿ.ಎಚ್.ಒ.ಡಾ. ಸುದರ್ಶನ ಮೊದಲಾದವರು ಉಪಸ್ಥಿತರಿದ್ದರು.