ಪುತ್ತೂರು: ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಮಸೀದಿ ಆವರಣಕ್ಕೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೋರ್ವ ಕೈಕಂಬ ನಡ್ತೋಟ ನಿವಾಸಿ ಸಚಿನ್ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆದಿದೆ.
ಭಾನುವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಕಡಬ ಠಾಣೆ ವ್ಯಾಪ್ತಿಯ ಮರ್ಧಾಳ ಬದ್ರಿಯಾ ಜುಮಾ ಮಸೀದಿಯಲ್ಲಿ ಘಟನೆ ನಡೆದಿದ್ದು, ಮಸೀದಿ ಕಾಂಪೌಂಡ್ ಒಳಗೆ ಬೈಕಿನಲ್ಲಿ ಬಂದಿದ್ದ ಇಬ್ಬರು ಕಿಡಿಗೇಡಿಗಳು ಬೈಕ್ ತಿರುಗಿಸಿ ತೆರಳಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಯುವಕರು ಮಸೀದಿ ಆವರಣಕ್ಕೆ ಬಂದ ವೇಳೆ ಜೈಶ್ರೀರಾಮ್ ಘೋಷಣೆ ಕೂಗಿದ್ದರು. ಈ ವೇಳೆ ಮಸೀದಿಯಲ್ಲಿದ್ದ ಧರ್ಮಗುರುಗಳನ್ನು ನೋಡಿ ತಕ್ಷಣ ಹಿಂತಿರುಗಿದ್ದರು. ಘಟನೆ ಕುರಿತು ಮಸೀದಿ ಆಡಳಿತ ಮಂಡಳಿ ಕಡಬ ಠಾಣೆಯಲ್ಲಿ ದೂರು ದಾಖಲಿಸಿತ್ತು. ಸ್ಥಳಕ್ಕಾಗಮಿಸಿದ ಕಡಬ ಠಾಣೆ ಎಸ್ಐ ಹಾಗೂ ಉಪ್ಪಿನಂಗಡಿ ಠಾಣೆ ಎಸ್ಐ ಮತ್ತು ಸಿಬ್ಬಂದಿ ಪರಿಸರದ ವಿವಿಧ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ್ದು ಎರಡು ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು. ಘಟನೆ ನಡೆದ 24 ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.