ಮಂಗಳೂರು: ಮಾದಕ ಪದಾರ್ಥ ಸೇವನೆ ವ್ಯಸನದ ವಿರುದ್ಧ ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ ಇಲ್ಲಿ ಬುಧವಾರ ಏರ್ಪಡಿಸಿದ್ದ ‘ಡ್ರಗ್ಸ್ ಮುಕ್ತ ಭವಿಷ್ಯಕ್ಕಾಗಿ ವಾಕಥಾನ್’ ವಿನೂತನ ರೀತಿಯಲ್ಲಿ ಜನ ಜಾಗೃತಿ ಮೂಡಿಸಿತು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಾಕಥಾನ್ ಉದ್ಘಾಟಿಸಿದರು.
ಮಾದಕ ಪದಾರ್ಥಗಳ ಸೇವನೆ ಚಟದಿಂದ ಎದುರಾಗುವ ಸಮಸ್ಯೆಗಳ ಕರಾಳತೆ ಬಿಂಬಿಸುವ ಫಲಕಗಳನ್ನು ಕೈಯಲ್ಲಿ ಹಿಡಿದ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿ ಸಮೂಹ ಬಿಡು ಬೀಸಾಗಿ ಹೆಜ್ಜೆಹಾಕುತ್ತಾ ಸಾಗಿತು.
ಮಾದಕ ಪದಾರ್ಥ ಸೇವನೆ ವ್ಯಸನದ ವಿರುದ್ಧ ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ ಇಲ್ಲಿ ಬುಧವಾರ ಏರ್ಪಡಿಸಿದ್ದ ‘ಡ್ರಗ್ಸ್ ಮುಕ್ತ ಭವಿಷ್ಯಕ್ಕಾಗಿ ವಾಕಥಾನ್’ ವಿನೂತನ ರೀತಿಯಲ್ಲಿ ಜನ ಜಾಗೃತಿ ಮೂಡಿಸಿತು.
ಡ್ರಗ್ಸ್ನಿಂದ ಬದುಕು ಹೇಗೆ ಭಯಾನಕವಾಗುತ್ತದೆ ಎಂಬುದನ್ನು ಬಿಂಬಿಸಲು ಕೆಲವು ವಿದ್ಯಾರ್ಥಿಗಳು ತಲೆ ಬುರುಡೆಯನ್ನು ಹೋಲುವ ಮುಖವಾಡಗಳನ್ನು ಧರಿಸಿ ಗಮನ ಸೆಳೆದರು. ಕೆಲವು ಕಾಲೇಜುಗಳ ವಿದ್ಯಾರ್ಥಿಗಳು ಪ್ರದರ್ಶಿಸಿದ್ದ ಸಂದೇಶ ಫಲಕಗಳು ಡ್ರಗ್ಸ್ ಹಾವಳಿಯ ದುಷ್ಪರಿಣಾಮಗಳನ್ನು ಮನಮುಟ್ಟುವಂತೆ ಬಿಂಬಿಸಿದ್ದವು. ಕೆಲವು ವಿದ್ಯಾರ್ಥಿಗಳು ಕರಪತ್ರಗಳನ್ನು ಹಂಚಿದರು.
120ಕ್ಕೂ ಅಧಿಕ ವಿದ್ಯಾಸಂಸ್ಥೆಗಳ ಸುಮಾರು 4 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಾಕಥಾನ್ನಲ್ಲಿ ಹೆಜ್ಜೆಹಾಕಿದರು. ಪುರಭವನದಿಂದ ಹೊರಟು ಹಂಪನಕಟ್ಟೆ, ಕೆ.ಎಸ್.ರಾವ್ ರಸ್ತೆ, ನವಭಾರತ ವೃತ್ತ, ಪಿವಿಎಸ್, ಲಾಲ್ಭಾಗ್, ಲೇಡಿಹಿಲ್, ನಾರಾಯಣ ಗುರು ವೃತ್ತ ಮಾರ್ಗವಾಗಿ ಮಂಗಳ ಕ್ರೀಡಾಂಗಣದವರೆಗೆ ಸಾಗಿತು.