ಬಂಟ್ವಾಳ: ಬಂಟ್ವಾಳದಲ್ಲಿ ಮತ್ತೆ ಕಾಂಗ್ರೆಸ್ ಮತಾಂಧ ಶಕ್ತಿಗಳ ಜೊತೆಯಾಗಿ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಮುಂದಾಗಿದೆ, ಕ್ಷೇತ್ರದ ಜನತೆ ಎಚ್ಚರಿಕೆಯಿಂದ ಮತದಾನ ಮಾಡಬೇಕಾದ ಅನಿವಾರ್ಯತೆ ಇದ್ದು,ಬಿಜೆಪಿಯನ್ನು ಗೆಲ್ಲಿಸಿ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.
ಅವರು ಸಂಗಬೆಟ್ಟು ಗ್ರಾಮದ ಮೇಲ್ಗುಡ್ಡೆ ಎಂಬಲ್ಲಿ ಎಸ್.ಸಿ.ಎಸ್ಟಿ ಕಾಲೋನಿಗೆ ಬೇಟಿ ನೀಡಿ ಮತಯಾಚನೆ ನಡೆಸಿದರು.
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಜನ ಮತ್ತೆ ಬಿಜೆಪಿಗೆ ಮತ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು.
ನಿಮ್ಮ ಧ್ವನಿಯಾಗಿ ವಿಧಾನಸಭೆಯಲ್ಲಿ ಮಾತನಾಡಲು ನನಗೆ ಆಶೀರ್ವಾದ ಮಾಡಿ ಎಂದು ಅವರು ಮನವಿ ಮಾಡಿದರು.
ತಾ.ಪಂ.ಮಾಜಿ ಸದಸ್ಯ ಪ್ರಭಾಕರ ಪ್ರಭು ಮಾತನಾಡಿ, ಶಾಸಕ ರಾಜೇಶ್ ನಾಯ್ಕ್ ಅವರು, ಸಂಗಬೆಟ್ಟು ಗ್ರಾ.ಪಂ.ವ್ಯಾಪ್ತಿಯಲ್ಲಿ ಹಿಂದೆಂದೂ ಕಂಡಿರದ ಅದ್ಬುತ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಬಂಟ್ವಾಳ ಕ್ಷೇತ್ರದ ಅಭಿವೃದ್ಧಿ ಜೊತೆಗೆ ಸಂಗಬೆಟ್ಟು ಗ್ರಾ.ಪ.ನ್ನು ಜಿಲ್ಲೆಯಲ್ಲಿ ಗುರುತಿಸಲ್ಪಡುವ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಶಾಸಕರ ಮೂಲಕ ಮಾಡಿಸುವ ಭರವಸೆ ನೀಡಿದರು.
ಅಭಿವೃದ್ಧಿ ಜೊತೆಗೆ ಹಿಂದೂ ಸಮಾಜಕ್ಕೆ ಶಾಂತಿ,ನೆಮ್ಮದಿಯ ಬದುಕಿಗಾಗಿ,ರಾಷ್ಟ್ರೀಯತೆಯನ್ನು ಉಳಿಸಿಕೊಳ್ಳಲು ಮತ್ತೊಮ್ಮೆ ಬಂಟ್ವಾಳದಲ್ಲಿ ರಾಜೇಶ್ ನಾಯ್ಕ್ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ಪ್ರಮುಖರಾದ ರತ್ನಕುಮಾರ್ ಚೌಟ,ದೀಪಕ್ ಶೆಟ್ಟಿಗಾರ್,ಉಮೇಶ್ ಗೌಡ,ದೇವರಾಜ ಸಾಲಿಯಾನ್, ಸುನಿಲ್ ಶೆಟ್ಟಿಗಾರ್,ಉದಯ, ಸುರೇಶ್ ಕುಲಾಲ್, ಶಕುಂತಲಾ, ಶಾಂತ, ಕಿಶೋರ್ ಕುಮಾರ್, ಗಣೇಶ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.