ಬಂಟ್ವಾಳ: ಗರ್ಭಿಣಿ ಮತ್ತು ಬಾಣಂತಿಯವರ ಆರೋಗ್ಯದಲ್ಲಿ ಪೌಷ್ಟಿಕಾಂಶದ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೆ ತಂದ ಮಹತ್ವಾಕಾಂಕ್ಷೆಯ ಯೋಜನೆ ಪೋಷಣ್ ಅಭಿಯಾನವಾಗಿದ್ದು, ಈ ಕಾರ್ಯಕ್ರಮ ಮಾಸಾಚರಣೆಗೆ ಸೀಮಿತವಾಗದೆ ದಿನ ನಿತ್ಯವೂ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳನ್ನು ಸೇವಿಸಿ ಯೋಜನೆ ಯ ಯಶಸ್ವಿಗಾಗಿ ನಾವೆಲ್ಲರೂ ಕೈಜೋಡಿಸಬೇಕಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಅವರು ಬಿಸಿರೋಡಿನ ರೋಟರಿ ಕ್ಲಬ್ ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ, ಆಯುಷ್ಯ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಸಜೀಪ ಮೂಡ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ 2022 ಇದರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಪ್ರಧಾನಿಯವರ ದೂರದೃಷ್ಟಿಯ ಯೋಜನೆ ಇದಾಗಿದ್ದು, ಭಾರತವನ್ನು ಜಗದ್ಗುರು ಮಾಡಬೇಕಾದರೆ ಮಕ್ಕಳ ಭವಿಷ್ಯ ಮುಖ್ಯ, ಮಕ್ಕಳ ಆರೋಗ್ಯ ರಕ್ಷಣೆ ಪಡೆಯುವ ನಿಟ್ಟಿನಲ್ಲಿ ಹಮ್ಮಿಕೊಂಡ ಇಂತಹ ಕಾರ್ಯಕ್ರಮಗಳು ನಿತ್ಯದ ಕಾರ್ಯಕ್ರಮ ವಾಗಲಿ ಎಂದು ಶುಭ ಹಾರೈಸಿದರು.
ಬಂಟ್ವಾಳ ಸಿ.ಡಿ.ಪಿ.ಒ.ಗಾಯತ್ರಿ ಕಂಬಳಿ ಕಾರ್ಯಕ್ರಮ ದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಅಶೋಕ್ ರೈ, ಆಯುಷ್ಯ ಇಲಾಖೆಯ ವೈದ್ಯಾಧಿಕಾರಿ ಡಾ| ಮಣಿಕರ್ನಿಕಾ, ರೋಟರಿ ಅಧ್ಯಕ್ಷ ಪುಷ್ಪರಾಜ ಹೆಗ್ಡೆ, ರೋಟರಿ ಸದಸ್ಯೆ ಪ್ರತಿಭಾ ರೈ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ಸುಶ್ಮಿತಾ ಶೆಟ್ಟಿ, ಪೋಷಣ್ ಅಭಿಯಾನದ ಜಿಲ್ಲಾ ಸಂಯೋಜಕಿ ಕು|ಬಬಿತಾ ಉಪಸ್ಥಿತರಿದ್ದರು.
ಪೋಷಣ್ ಅಭಿಯಾನ ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಹಾಗೂ ಭಾಗವಹಿಸಿ ದವರಿಗೆ ಬಹುಮಾನ ನೀಡಲಾಯಿತು.
ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾವತಿ ಸ್ವಾಗತಿಸಿ, ಸಂರಕ್ಷಣಾಧಿಕಾರಿ ಬಿ. ಭಾರತಿ ವಂದಿಸಿದರು. ಮೇಲ್ವಿಚಾರಕಿ ಸವಿತಾ ಕಾರ್ಯಕ್ರಮ ನಿರೂಪಿಸಿದರು.