ಬಂಟ್ವಾಳ: ಧರ್ಮ ಏಕತೆ, ಸಂಘಟನೆಗೆ ಧಾರ್ಮಿಕ ಉತ್ಸವ ಕಾರಣವಾಗುತ್ತದೆ. ಊರಿನ ದೇಗುಲದ ಬ್ರಹ್ಮಕಲಶೋತ್ಸವ ಗ್ರಾಮದ ಐಕ್ಯಮತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಶ್ರೀ ಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು.
ಅವರು ಮಾ.೮ ರಿಂದ ಮೊದಲ್ಗೊಂದು ೧೩ ರ ತನಕ ನಡೆಯುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಮೊದಲ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಬ್ರಹ್ಮಕಲಶೋತ್ಸವ ಎಲ್ಲರ ಜೀವನ ಮೌಲ್ಯಗಳನ್ನು ಉದ್ದೀಪಿಸುವ ಉತ್ಸವ ಆಗಬೇಕು ಎಂದ ಅವರು ದೇಗುಲಗಳಲ್ಲಿ ಧರ್ಮ ಶಿಕ್ಷಣ ಅರ್ಥಪೂರ್ಣವಾಗಿ ನಡೆದುಕೊಂಡು ಬರಬೇಕು ಎಂದು ತಿಳಿಸಿದರು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರವಿ ಶೆಟ್ಟಿ ಮೂಡಂಬೈಲು ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಕ್ಯಾಂಪ್ಕೊ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ್ ಅಜಿಲ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇಗುಲ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ಪುಣಚ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ ಮೂಡಂಬೈಲು, ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಭಟ್ ಅಮೈ ಭಾಗವಹಿಸಿದ್ದರು.
ದೇಗುಲ ಆಡಳಿತ ಸಮಿತಿ ಅಧ್ಯಕ್ಷ ಎಸ್.ಆರ್.ರಂಗಮೂರ್ತಿ ಸ್ವಾಗತಿಸಿದರು. ಮಹೇಶ್ ಶೆಟ್ಟಿ ಬೈಲುಗುತ್ತು ವಂದಿಸಿದರು. ವಿನೋದ್.ಎ, ಅಭಿಷೇಕ್ ಬಳಂತಿಮೊಗರು ಕಾರ್ಯಕ್ರಮ ನಿರೂಪಿಸಿದರು.
ಸಂಜೆ ಪುಣಚ ಪರಿಯಾಲ್ತಡ್ಲ ಅಶ್ವತ್ಥಕಟ್ಟೆ ವಠಾರದಿಂದ ಹಸಿರುವಾಣಿ ಹೊರೆಕಾಣಿಕೆಯ ಭವ್ಯ ಮೆರವಣಿಗೆ ನಡೆಯಿತು. ಸಭೆಯ ಬಳಿಕ ರಾಮಕೃಷ್ಣ ಕಾಟುಕುಕ್ಕೆ ತಂಡದಿಂದ ‘ಗಾನಾಮೃತ ಮಂಜರಿ’ ನಡೆಯಿತು.