ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಗುರುವಾರ ಭಾರೀ ಜನಸಾಗರದ ನಡುವೆ ಅದ್ದೂರಿ ಪಾದಯಾತ್ರೆ ನಡೆಸಿ ನಾಮಪತ್ರ ಸಲ್ಲಿಸಿದರು.
ಬಂಟ್ವಾಳದ ತಿರುಮಲ ವೆಂಕಟರಮಣ ದೇವಸ್ಥಾನದಿಂದ ಹೊರಟ ಸಹಸ್ರಾರು ಜನರ ಉತ್ಸಾಹಭರಿತ ಪಾದಯಾತ್ರೆ ಬಿ.ಸಿ.ರೋಡ್ ಬಸ್ ನಿಲ್ದಾಣದ ವರೆಗೆ ಸಾಗಿತು. ನಂತರ ಮಿನಿವಿಧಾನಸೌಧದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಪಕ್ಷದ ಪ್ರಮುಖರೊಂದಿಗೆ ತೆರಳಿದ ರೈಗಳು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವುದಕ್ಕೂ ಮುನ್ನಾ ಬಿ.ಸಿ.ರೋಡ್ ಕೇಂದ್ರ ಭಾಗದಲ್ಲಿ ಜಮಾಯಿಸಿದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ರಮಾನಾಥ ರೈ, ನನ್ನ ಸುಧೀರ್ಘ ಜನಸೇವೆಯ ಜೀವನದಲ್ಲಿ ಒಂಬತ್ತನೇ ಬಾರಿ ಒಂದೇ ಪಕ್ಷದಿಂದ ನಾಮಪತ್ರ ಸಲ್ಲಿಸುತ್ತಿದ್ದೇನೆ. ಎಂತಹುದೇ ಪ್ರತೀಕೂಲ ವಾತಾವರಣದಲ್ಲಿ ನನ್ನ ಜೊತೆ ನಿಂತ ನಿಮ್ಮ ಋಣವನ್ನು ಜನ್ಮ ಜನ್ಮಾಂತರಕ್ಕೂ ತೀರಿಸಲು ಸಾಧ್ಯವಿಲ್ಲ ಎಂದು ನುಡಿದರು.
ಇಂದು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ನನ್ನೊಂದಿಗೆ ಪಾದಯಾತ್ರೆಯಲ್ಲಿ ಭಾಗವಹಿಸಿ, ನನ್ನನ್ನು ಆಶೀರ್ವದಿಸಿದ ತಮಗೆಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಅಧಿಕಾರದಲ್ಲಿದ್ದಾಗಲೂ ನಾನು ತಪ್ಪುಗಳನ್ನು ಮಾಡಿಲ್ಲ, ತಮಗೆಲ್ಲಾ ಅಗೌರವವನ್ನುಂಟು ಮಾಡುವ ಯಾವುದೇ ಕೃತ್ಯವನ್ನು ಮಾಡಿಲ್ಲ ಎಂದು ಅವರು ಸ್ಮರಿಸಿದರು.
ಕಳೆದ ಚುನಾವಣೆಯಲ್ಲಿ ನನ್ನನ್ನು ಅಪಪ್ರಚಾರದಿಂದ ಸೋಲಿಸಲಾಯಿತು. ಸೋತ ಬಗ್ಗೆ ನನಗೆ ಬೇಸರವಿಲ್ಲ, ಆದರೆ ಸೋಲಿಸಿದ ವಿಧಾನದ ಬಗ್ಗೆ ಬೇಸರವಿದೆ ಎಂದು ಅವರು ತಿಳಿಸಿದರು. ಈ ಚುನಾವಣೆಯಲ್ಲಿ ತಮ್ಮೆಲ್ಲರ ಸಹಕಾರದಿಂದ ಬಂಟ್ವಾಳದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸೋಣ ಎಂದು ಅವರು ಕರೆ ನೀಡಿದರು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಂಜೇಶ್ವರ ಶಾಸಕ ಅಶ್ರಫ್, ಕೇರಳದ ಖ್ಯಾತ ನ್ಯಾಯವಾದಿ ಗೋವಿಂದನ್, ನ್ಯಾಯವಾದಿ ಅಶ್ವನಿ ಕುಮಾರ್ ರೈ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸುವಾಗ ರಮಾನಾಥ ರೈ ಅವರ ಜೊತೆಗೆ ಕೆ.ಪಿ.ಸಿ.ಸಿ. ಸದಸ್ಯರುಗಳಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪ್ರಮುಖರಾದ ಬಿ.ಎಚ್. ಖಾದರ್ ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಇದ್ದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ, ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ ಪ್ರಮುಖರಾದ ಎಂ.ಎಸ್. ಮುಹಮ್ಮದ್, ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್, ಜನಾರ್ಧನ ಚೆಂಡ್ತಿಮಾರ್, ಅಬ್ಬಾಸ್ ಅಲಿ, ರಾಕೇಶ್ ಮಲ್ಲಿ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಸಪಲ್ಯ, ನ್ಯಾಯವಾದಿ ಸುರೇಶ್ ಬಿ. ನಾವೂರ, ರೈಯವರ ಧರ್ಮಪತ್ನಿ ಧನಭಾಗ್ಯ ರೈ, ಸಹೋದರಿ ಚೆನ್ನವೇಣಿ ಎಂ. ಶೆಟ್ಟಿ ಮತ್ತು ಪಕ್ಷದ ಎಲ್ಲಾ ಮುಂಚೂಣಿ ಘಟಕದ ಅಧ್ಯಕ್ಷರುಗಳು, ಪ್ರಮುಖರುಗಳು ಉಪಸ್ಥಿತರಿದ್ದರು. ರಮಾನಾಥ ರೈಗಳ ಮಗಳು ಚರಿಷ್ಮಾ ರೈ ಮೆರವಣಿಗೆಯ ಆರಂಭದಿಂದ ಕೊನೆವರೆಗೂ ಇದ್ದು, ಕಾರ್ಯಕರ್ತರನ್ನು ಹುರಿದುಂಬಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ನಿರೂಪಿಸಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಧನ್ಯವಾದ ಸಲ್ಲಿಸಿದರು.