ಬೆಳ್ತಂಗಡಿ: ಅರಣ್ಯ ಸಚಿವರಾದ ಉಮೇಶ್ ಕತ್ತಿ ಅವರ ನಿಧನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಕತ್ತಿಯವರು ಧರ್ಮಸ್ಥಳ ಕ್ಷೇತ್ರದ ಅಭಿಮಾನಿಯೂ, ಭಕ್ತರೂ ಆಗಿದ್ದು ನಮ್ಮ ಎಲ್ಲಾ ಕಾರ್ಯಕ್ರಮಗಳಿಗೆ ಸಕ್ರಿಯ ಸಹಕಾರ ನೀಡಿ ಪ್ರೋತ್ಸಾಹಿಸುತ್ತಿದ್ದರು. ವಿಶೇಷವಾಗಿ, ರೈತರ ಕೃಷಿಗೆ ಕಾಡು ಪ್ರಾಣಿಗಳಿಂದ ಆಗುವ ಉಪಟಳವನ್ನು ತಡೆಯಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಹಮ್ಮಿಕೊಂಡ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಉತ್ತಮ ರೀತಿಯ ಸಹಕಾರ ನೀಡಿದ್ದಾರೆ. ಇತ್ತೀಚೆಗೆ ವೇಣೂರಿನಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಪ್ರೋತ್ಸಾಹಿಸಿದ್ದಾರೆ. ಅಲ್ಲದೆ, ಅರಣ್ಯ ಇಲಾಖೆಯಿಂದ ಹಣ್ಣಿನ ಗಿಡಗಳನ್ನು ಕೊಡಿಸಿ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದರು.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರಲ್ಲದೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಹೆಗ್ಗಡೆಯವರು ಪ್ರಾರ್ಥಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.