ಬೆಳ್ತಂಗಡಿ: ಸರಕಾರದ ಪ್ರತಿಯೊಂದು ಇಲಾಖೆಯ ಸೌಲಭ್ಯವನ್ನು ಗ್ರಾಮಸ್ಥರಿಗೆ ತಲುಪಿಸಬೇಕು ಎಂಬ ಉದ್ದೇಶದಿಂದ ಸರಕಾರವು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ನಡೆಸುತ್ತಿದ್ದು ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಹಶೀಲ್ದಾರ್ ಪೃಥ್ವಿ ಸಾನಿಕಮ್ ಹೇಳಿದರು.
ಅವರು ಶನಿವಾರ ಮಾಲಾಡಿ ಗ್ರಾ.ಪಂ. ವಠಾರದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಭಾಗದ ಸಮಸ್ಯೆಗಳನ್ನು ಅಧಿಕಾರಿಗಳು ತಿಳಿದು ಅದಕ್ಕೆ ಪರಿಹಾರ ನೀಡುವಂತಹ ಕಾರ್ಯಕ್ರಮ ಇದಾಗಿದೆ. ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಹಾಗೂ ಗ್ರಾಮದ ಸಮಸ್ಯೆಗಳನ್ನು ತಿಳಿಸಿದಾಗ ಗ್ರಾಮದ ಅಭಿವೃದ್ಧಿಯಾಗಲು ಸಾಧ್ಯ ಎಂದರು.
ಇದೇ ಸಂದರ್ಭದಲ್ಲಿ ಕೃಷಿ ಇಲಾಖೆ ಹಾಗೂ ತೋಟಗಾರಿಕಾ ಇಲಾಖೆಯಿಂದ ಬೆಳೆ ನಷ್ಟ ಪರಿಹಾರ ಕಡಿಮೆ ಸಿಗುತ್ತಿದ್ದು ಈ ಬಗ್ಗೆ ಸರಕಾರದ ಗಮನಕ್ಕೆ ತರಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ದಲಿತ ಕುಟುಂಬದವರು ಭೂ ಪರಿವರ್ತನೆ ಮಾಡಬಾರದು ಎಂಬ ಆದೇಶದ ವಿರುದ್ಧ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು. ಕೃಷಿ ಅಧಿಕಾರಿಗಳು ಮಾಹಿತಿ ನೀಡಿ ಸರಕಾರದ ಸೌಲಭ್ಯ ಕೃಷಿಕರಿಗೆ ನೀಡಲು ಕೆವೈಸಿ ಮಾಡಿಸಿಕೊಳ್ಳಬೇಕು ಮತ್ತು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಲ್ಲಿ ಹಣ ಬಾರದಿದ್ದರೆ ಆಧಾರ್ ಕಾರ್ಡೋಂದಿಗೆ ಕೃಷಿ ಇಲಾಖೆಗೆ ಭೇಟಿ ನೀಡಿದರೆ ಅದಕ್ಕೆ ಪರಿಹಾರ ನೀಡಲಾಗುತ್ತದೆ. ಕೃಷಿಕರು ಬೆಲೆ ವಿಮೆಯ ಬಗ್ಗೆ ಸರಿಯಾದ ಮಾಹಿತಿ ಪಡೆದುಕೊಂಡು ಅದರ ಸುಪಯೋಗ ಪಡೆದುಕೊಳ್ಳಬೇಕು ಎಂದರು.
ಮಾಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಒಂದು ಕುಟುಂಬದ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಪತಿಯಿಂದ ದೌರ್ಜನ್ಯ ನಡೆಯುತ್ತಿದ್ದು ಇದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ವಿವಿಧ ಇಲಾಖಾ ಅಧಿಕಾರಿಗಳು ಇಲಾಖೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮಾಲಾಡಿ ಗ್ರಾ.ಪಂ ಅಧ್ಯಕ್ಷೆ ಬೇಬಿ ಸೂಸನ್, ಉಪಾಧ್ಯಕ್ಷ ದಿನೇಶ್ ಕರ್ಕೆರಾ, ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಮಹಿಳಾ ಮತ್ತು ,ಮಕ್ಕಳ ಕಲ್ಯಾಣ ಅಧಿಕಾರಿ ಪ್ರಿಯಾ ಆಗ್ನೇಸ್, ಸಮಾಜ ಕಲ್ಯಾಣ ಇಲಾಖಾಧಿಕಾರಿ ಹೇಮಚಂದ್ರ, ಕೃಷಿ ಇಲಾಖಾಧಿಕಾರಿ ಹುಮೇರ ಜಮೀನ್, ಶಿಕ್ಷಣ ಸಂಯೋಜಕ ಸುಭಾಸ್ ಜಾಧವ್, ಮೊದಲಾದ ಅಧಿಕಾರಿಗಳು ಉಪಸ್ಥಿತರಿದ್ದರು.
ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ, ಹಾಗೂ ಸರಕಾರದ ವಿವಿಧ ಸೌಲಭ್ಯಗಳನ್ನು ವಿತರಿಸಲಾಯಿತು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಸ್ವಾಗತಿಸಿ, ತಾ.ಪಂ ಸಂಯೋಜಕ ಜಯಾನಂದ್ ಲಾಯಿಲ ಕಾರ್ಯಕ್ರಮ ನಿರೂಪಿಸಿದರು.