ಬೆಳ್ತಂಗಡಿ: ದೇಶದ ೭೫ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಆ.೮ ರಿಂದ ೧೫ರ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ರಾಜ್ಯದಲ್ಲಿ ೧೫,೭೫೬ ಶ್ರದ್ಧಾಕೇಂದ್ರಗಳನ್ನು ೩,೯೭,೦೦೦ ಸ್ವಯಂ ಸೇವಕರು ಸ್ವಚ್ಛತಾ ಸಪ್ತಾಹದ ಮೂಲಕ ಸ್ವಚ್ಛಗೊಳಿಸಲಿದ್ದಾರೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ತಿಳಿಸಿದ್ದಾರೆ.
“ನಮ್ಮೂರು ನಮ್ಮ ಶ್ರದ್ಧಾಕೇಂದ್ರ” ಎಂಬ ಧ್ಯೇಯ ವಾಕ್ಯದೊಂದಿಗೆ ಕಳೆದ ಆರು ವರ್ಷಗಳಿಂದ ವರ್ಷದಲ್ಲಿ ಎರಡು ಬಾರಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಮಕರ ಸಂಕ್ರಾಂತಿ ಸಂದರ್ಭದಲ್ಲಿ ಶ್ರದ್ಧಾ ಕೇಂದ್ರಗಳಾದ ದೇವಸ್ಥಾನ, ಬಸದಿ, ಮಸೀದಿ ಮತ್ತು ಚರ್ಚ್ಗಳ ಸ್ವಚ್ಛತಾ ಕಾರ್ಯವನ್ನು ಆಯೋಜಿಸಲಾಗುತ್ತದೆ.
ಭಜನಾ ತರಬೇತಿ ಕಮ್ಮಟ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟವನ್ನು ಸೆಪ್ಟೆಂಬರ್ ೧೬ ರಿಂದ ೨೨ ರ ವರೆಗೆ ಆಯೋಜಿಸಲಾಗಿದ್ದು ವಿವಿಧ ಸಮಿತಿಗಳನ್ನು ರಚಿಸಿ ಸಿದ್ಧತೆಗಳು ನಡೆಯುತ್ತಿವೆ.
ರಾಗ, ತಾಳ, ಲಯ ಬದ್ಧವಾಗಿ ಭಜನೆ ಹಾಡುವ ಕುರಿತು ಪ್ರಾತ್ಯಕ್ಷಿಕೆ, ಚರ್ಚೆ, ತಜ್ಞರಿಂದ ಉಪನ್ಯಾಸ, ಸಮಾಲೋಚನೆ ಮೂಲಕ ಶಿಬಿರಾರ್ಥಿಗಳಿಗೆ ಮಾಹಿತಿ, ಮಾರ್ಗದರ್ಶನ ನೀಡಲಾಗುತ್ತದೆ.