ಮಂಗಳೂರು, ಸೆ.14: ಬ್ರಹ್ಮಶ್ರೀ ನಾರಾಯಣಗುರು ಅವರಿಗೆ ಬಿಜೆಪಿ ಯಾವತ್ತೂ ಅವಮಾನ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ ಹೇಳಿದರು.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಬಾರಿಯ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಮಂಗಳೂರಿನಲ್ಲಿ ಏಕೆ ನಡೆಸಲಾಯಿತು ಎಂಬ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ಕುಮಾರ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಮುಂದಕ್ಕೆ ಈ ಕಾರ್ಯಕ್ರಮ ಉಡುಪಿ, ಶಿವಮೊಗ್ಗ ಸಹಿತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯಲಿದೆ ಎಂದು ಹೇಳಿದರು.
ಗುರು ಜಯಂತಿಯ ಮುಂದಿನ ದಿನ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ಕುಮಾರ್ ಕಟೀಲು, ಬಿಜೆಪಿ ಪ್ರಮುಖರು ಕುದ್ರೋಳಿ ಶ್ರೀ ಗೋಕರ್ಣನಾಥ ಹಾಗೂ ನಾರಾಯಣ ಗುರುಗಳಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಗುರು ಜಯಂತಿಯಂದು ಸಚಿವ ಸುನೀಲ್ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ ಸಹಿತ ಬಿಜೆಪಿ ಪ್ರಮುಖರು ಕುದ್ರೋಳಿ ದೇವಸ್ಥಾನದಲ್ಲಿ ಗುರುಗಳಿಗೆ ವಿಶೇಷ ಪೂಜೆ ಸಲ್ಲಿಸಿ, ನಾರಾಯಣಗುರುಗಳ ಸ್ತಬ್ದಚಿತ್ರಕ್ಕೆ ನಮಿಸಿ, ಮೆರವಣಿಗೆ ಆರಂಭಿಸಲಾಗಿತ್ತು. ಇದೇ ಪ್ರಥಮ ಬಾರಿಗೆ ಗುರು ಜಯಂತಿ ಕಾರ್ಯಕ್ರಮ ಮಂಗಳೂರಿನಲ್ಲಿ ವೈಭವದಿಂದ ನಡೆದಿದೆ.
ಗಣರಾಜ್ಯೋತ್ಸವ ಪರೇಡ್ನಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರ ವಿಚಾರದಲ್ಲಿ ಕಾಂಗ್ರೆಸ್ ವಿನಾಕಾರಣ ವಿವಾದ ಸೃಷ್ಟಿಸಿತ್ತು. ನಾರಾಯಣಗುರು ಅವರ ಬದಲಿಗೆ ಶಂಕರಾಚಾರ್ಯರ ಸ್ತಬ್ಧಚಿತ್ರ ಹಾಕುವಂತೆ ಕೇಂದ್ರ ಸರಕಾರ ಸೂಚಿಸಿತ್ತು ಎಂಬುದಕ್ಕೆ ಯಾವುದೇ ದಾಖಲೆ ಇಲ್ಲ.
ಈ ಬಗ್ಗೆ ಬಿ.ಜನಾರ್ದನ ಪೂಜಾರಿಯವರಿಗೂ ನಾನು ಮಾಹಿತಿ ನೀಡಿದ್ದೆ. ಈ ಹಿನ್ನೆಲೆಯಲ್ಲಿ ಪೂಜಾರಿ ಈ ವಿಚಾರದಲ್ಲಿ ನಡೆದ ಪ್ರತಿಭಟನೆಯಲ್ಲಿ ಯಾವುದೇ ಮಾತು ಆಡಿಲ್ಲ. ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣಗುರು ಹೆಸರು ಇರಿಸಲು ಮನಪಾ ಮುಂದಾದಾಗ ರಮಾನಾಥ ರೈ, ಜೆ.ಆರ್.ಲೋಬೊ ವಿರೋಧಿಸಿದ್ದರು ಎಂದು ಹರಿಕೃಷ್ಣ ಬಂಟ್ವಾಳ ಹೇಳಿದರು.