ಮಂಗಳೂರು: ಸನಾತನ ಹಿಂದೂ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಹಿಂದೂ ಸಂಘಟನೆಗಳು ತಿರುಗಿಬಿದ್ದಿದ್ದು, ಇದೀಗ, ಉದಯನಿಧಿ ಅವರ ವಿವಾದಾತ್ಮಕ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಪೊಲೀಸ್ ದೂರು ದಾಖಲುಗೊಂಡಿದೆ.
ಹಿಂದೂ ಜಾಗರಣ ವೇದಿಕೆ ವತಿಯಿಂದ ಹಿಂದೂ ಜಾಗರಣ ವೇದಿಕೆ ಮುಖಂಡರು ಜಿಲ್ಲೆಯ ಬಂಟ್ವಾಳ, ಪುತ್ತೂರು, ಮಂಗಳೂರು ಗ್ರಾಮಾಂತರ ಮತ್ತು ಸುಳ್ಯ ಪೊಲೀಸ್ ಠಾಣೆಗಳಲ್ಲಿ ದೂರು ನೀಡಿದ್ದಾರೆ.
ಸನಾತನ ಹಿಂದು ಧರ್ಮವನ್ನು ಸಾಂಕ್ರಾಮಿಕ ರೋಗ ಗಳಿಗೆ ಹೋಲಿಕೆ ಮಾಡಿದ್ದ ಉದಯಗಿರಿ ಸ್ಟಾಲಿನ್ ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ.
ಉದ್ದೇಶಪೂರ್ವಕವಾಗಿ ಹಿಂದೂ ಧರ್ಮವನ್ನು ಸಾಂಕ್ರಾಮಿಕ ರೋಗಗಳಿಗೆ ಹೋಲಿಕೆ ಮಾಡುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆ ಮತ್ತು ನಂಬಿಕೆಗಳಿಗೆ ಉದಯಗಿರಿ ಸ್ಟಾಲಿನ್ ಅಪಮಾನ ಮಾಡಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆ ಆಕ್ರೋಶ ವ್ಯಕ್ತಪಡಿಸಿದ್ದು, ದ್ವೇಷ ಹರಡುವ ಮತ್ತು ಸಮುದಾಯಗಳ ನಡುವೆ ಘರ್ಷಣೆಗೆ ಕಾರಣವಾಗಲು ಉದ್ದೇಶಿತ ಹೇಳಿಕೆ ಇದಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಐಪಿಸಿ ಕಲಂ 153A ಮತ್ತು 295 A ಪ್ರಕಾರ ಉದಯಗಿರಿ ವಿರುದ್ಧ ಹಿಂದೂ ಜಾಗರಣ ವೇದಿಕೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದೂರನ್ನು ದಾಖಲಿಸಿ ತಮಿಳುನಾಡು ಮುಖ್ಯಮಂತ್ರಿ ಪುತ್ರನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಸರಿ ಸಂಘಟನೆಗಳು ಆಗ್ರಹಿಸಿವೆ.