ಮಂಗಳೂರು: “ಮಂಗಳೂರು ಉತ್ತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಪ್ರಮುಖ ಆದ್ಯತೆ ಕೊಟ್ಟು ಜನಸಾಮಾನ್ಯರ ಸಮಸ್ಯೆ ಪರಿಹಾರಕ್ಕೆ ಒತ್ತು ಕೊಟ್ಟು ಕೆಲಸ ಮಾಡಿದ ತೃಪ್ತಿ ನನಗಿದೆ” ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, “ಕ್ಷೇತ್ರ ವ್ಯಾಪ್ತಿಯಲ್ಲಿ ಬ್ಲೂ ಫ್ಲ್ಯಾಗ್ ಬೀಚ್ ನಿರ್ಮಾಣಕ್ಕೆ ತಣ್ಣೀರುಬಾವಿಯಲ್ಲಿ ಅಭಿವೃದ್ಧಿ ಕಾಮಗಾರಿ ಭರದಿಂದ ನಡೆಯುತ್ತಿದೆ. ಅಧಿಕಾರಕ್ಕೆ ಬಂದ ಮೊದಲ ವರ್ಷ ನೆರೆ ಸಮಸ್ಯೆ ಎದುರಾಯಿತು, ನಂತರದ ಎರಡು ವರ್ಷ ಕೋವಿಡ್ ಸಂಕಷ್ಟ ಎದುರಾಯಿತು. ಹೀಗೆ ಮೂರು ವರ್ಷಗಳ ಕಾಲ ಅಭಿವೃದ್ಧಿ ಮಾಡಲಾಗದೆ ಇದ್ದರೂ ಸಿಕ್ಕಿರುವ ಒಂದೂ ಮುಕ್ಕಾಲು ವರ್ಷದ ಅವಧಿಯಲ್ಲಿ ಅಭಿವೃದ್ಧಿ ಕಾಮಗಾರಿ ನಿತ್ಯ ನಿರಂತರವಾಗಿ ನಡೆಯುತ್ತಿದೆ. ನಾಯರ್ ಕುದ್ರುವಿನಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ವಿಶೇಷ ಮುತುವರ್ಜಿಯಿಂದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
ಪಣಂಬೂರು ಬೀಚ್ ಪ್ರವಾಸೋದ್ಯಮದಿಂದ ಹಿಂದೆ ವರ್ಷಕ್ಕೆ 10 ಲಕ್ಷ ಆದಾಯವಿದ್ದರೆ ಈಗ ತಿಂಗಳಿಗೆ 10-12 ಲಕ್ಷ ಆದಾಯ ಸಿಗುವಂತೆ ಮೂಲಸೌಕರ್ಯ ಅಭಿವೃದ್ಧಿ ಪಡಿಸಲಾಗುತ್ತಿದೆ. ಮುಕ್ಕ ಸದಾಶಿವ ದೇವಸ್ಥಾನದ ಬಳಿ ಸಣ್ಣ ಕೆರೆಯಿದ್ದು ಅದನ್ನು ಪ್ರವಾಸಿಗರ ಅನುಕೂಲಕ್ಕೆ ತಕ್ಕಂತೆ ಅಭಿವೃದ್ಧಿ ಪಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಇಲ್ಲಿ ಎರಡು ಕಡೆ ಮಳೆಗಾಲದಲ್ಲಿ ಸಮುದ್ರ ಮುಂದೊತ್ತಿ ಬಂದ ಕಾರಣ ರಸ್ತೆ ತುಂಡಾಗಿದ್ದು ಅದನ್ನು ಪಥ ಬದಲಿಸಿ ನಿರ್ಮಾಣ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ” ಎಂದರು.
“1966.48 ಕೋಟಿ ರೂ. ಅನುದಾನದಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕೊಟ್ಟಾರ ಚೌಕಿಯಲ್ಲಿ ಅಮರ್ ಜವಾನ್ ಹುತಾತ್ಮರ ಸ್ಮಾರಕ ನಿರ್ಮಾಣ ಮಾಡಲು ಮುಂದಿನ 10-15 ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ. ಗ್ರಾಮ ಪಂಚಾಯತ್ ಹಾಗೂ ನಗರದ ಒಳಗಿನ ಸಣ್ಣ ಸಣ್ಣ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ.
ಪ್ರತೀ ವಾರ್ಡ್, ಪಂಚಾಯತ್ ಗೆ 8-10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ “ಜಲ್ ಜೀವನ್ ಮಿಷನ್” ಮೂಲಕ ಮನೆಮನೆಗೆ ಶುದ್ಧ ಕುಡಿಯುವ ನೀರು ವ್ಯವಸ್ಥೆಗೆ ಆದ್ಯತೆ ನೀಡಲಾಗುತ್ತಿದೆ. ಬಹುಗ್ರಾಮ ಕುಡಿಯುವ ನೀರು ಯೋಜನೆ ವ್ಯಾಪ್ತಿಯಲ್ಲಿ ನನ್ನ 13 ಗ್ರಾಮ ಪಂಚಾಯತ್ ಬರುತ್ತಿದ್ದು 200 ಕೋಟಿ ರೂ. ಅನುದಾನದಲ್ಲಿ ಗುದ್ದಲಿಪೂಜೆ ನೆರವೇರಿಸಲಾಗಿದೆ. ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ” ಎಂದು ಶಾಸಕರು ಹೇಳಿದರು.
“ಅಡ್ಯಾರ್ ಮತ್ತು ಅರ್ಕುಳ ಗ್ರಾಮದ ಜನರು ಹಿಂದೆ ಕಂದಾಯ ಕೆಲಸಗಳಿಗೆ ಗುರುಪುರಕ್ಕೆ ಹೋಗಬೇಕಿತ್ತು. ಆದರೆ ಆ ಗ್ರಾಮಗಳನ್ನು ಮಂಗಳೂರಿಗೆ ಸೇರಿಸುವ ಮೂಲಕ ಸಮಸ್ಯೆ ಬಗೆಹರಿಸಲಾಗಿದೆ.
ಕ್ಷೇತ್ರದಲ್ಲಿ 6455 ಮಂದಿಗೆ ಹಕ್ಕುಪತ್ರ ವಿತರಿಸಲಾಗಿದೆ. ಜನಸ್ಪಂದನ ಕಾರ್ಯಕ್ರಮಗಳನ್ನು ಏಳು ಮಹಾಶಕ್ತಿ ಕೇಂದ್ರಗಳ ಅಲ್ಲಲ್ಲಿ ಏರ್ಪಡಿಸಿ ಎಲ್ಲಾ ಇಲಾಖೆಗಳ ಅಧಿಕಾರಿಗಳನ್ನು ಒಂದೆಡೆ ಸೇರಿಸಿ ಜನರಿಗೆ ಅನುಕೂಲವಾಗುವಂತೆ ನೋಡಿಕೊಳ್ಳಲಾಗಿದೆ.
ಕೋವಿಡ್ ನಂತರ ಅಭಿವೃದ್ಧಿ ಕಾಮಗಾರಿ ವೇಗ ಪಡೆದುಕೊಂಡಿದ್ದು ಕೋವಿಡ್ ಸಮಯದಲ್ಲೂ ಉಚಿತ ಆಂಬುಲೆನ್ಸ್, ಔಷಧಿ ವಿತರಣೆಗೆ ಕ್ರಮ ಕೈಗೊಂಡಿದ್ದೇವೆ” ಎಂದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಉಪಸ್ಥಿತರಿದ್ದರು.