ಮಂಗಳೂರು: ಗಣೇಶ ಚತುರ್ಥಿ ಪ್ರಯುಕ್ತ ಸೆ.18ರಿಂದ 19ರವರೆಗೆ ಸರ್ಕಾರಿ ರಜೆ ಬದಲಾವಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ದೇಶಾದ್ಯಂತ ಸೆಪ್ಟೆಂಬರ್ 19ರಿಂದ ಗಣೇಶ ಚತುರ್ಥಿಯನ್ನು ಆಚರಣೆ ಮಾಡಲಾಗುತ್ತಿದೆ. ಆದರೆ ಗಣೇಶೋತ್ಸವಕ್ಕೆ ಸೆ.18ಕ್ಕೆ ಸರಕಾರಿ ರಜೆ ಎಂದು ಘೋಷಣೆಯಾಗಿದೆ. ಗಣೇಶ ಚತುರ್ಥಿ ಆಚರಣೆ ಇರುವುದು ಸೆಪ್ಟೆಂಬರ್ 19ಕ್ಕೆ. ಆದ್ದರಿಂದ ಸೆ. 19ರಂದೇ ಸಾರ್ವತ್ರಿಕ ರಜೆ ನೀಡಬೇಕೆಂಬ ಒತ್ತಾಯ ಎಲ್ಲೆಡೆ ಕೇಳಿಬಂದಿತ್ತು.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗಣೇಶೋತ್ಸವವನ್ನು ಸೆ. 19ರಂದು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅದೇ ದಿನ ಜಿಲ್ಲೆಗೆ ಸರ್ಕಾರಿ ರಜೆ ಘೋಷಣೆ ಮಾಡಿ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಮಾಡಿದ್ದರು. ಇದೀಗ ಸೆ. 19ರಂದು ರಜೆ ನೀಡಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ದ.ಕ. ಜಿಲ್ಲಾಧಿಕಾರಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.