ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಆರು ಹಸುಗಳು, ಎರಡು ಕರುಗಳನ್ನು ರಕ್ಷಿಸಲಾಗಿದ್ದು, ಮೂರು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಳ್ತಂಗಡಿ ತಾಲೂಕಿನ ಮೊರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್, ಓಲಗದ್ದೆ ನಿವಾಸಿ ಪುಷ್ಪರಾಜ್, ಅರಕಲಗೂಡು ನಿವಾಸಿ ಚನ್ನಕೇಶವ, ಹಾಸನ ಜಿಲ್ಲೆ ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಬಂಧಿತ ಆರೋಪಿಗಳು.
ಪೊಲೀಸರ ಪ್ರಕಾರ, ಮೊದಲ ಇಬ್ಬರು ಆರೋಪಿಗಳು ಬಿಜೆಪಿ ಕಾರ್ಯಕರ್ತರು ಎಂದು ಶಂಕಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರು ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನಗಳನ್ನು ಪತ್ತೆ ಹಚ್ಚಿದ್ದಾರೆ. ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ವಾಹನಗಳಲ್ಲಿ ತುಂಬಿಸಿ ಸಾಗಿಸುತ್ತಿರುವುದು ಕಂಡು ಬಂದಿದೆ.
ಪ್ರಾಣಿಗಳನ್ನು ಮಾರಾಟ ಮಾಡಲು ಕರೆದೊಯ್ಯಲಾಗುತ್ತಿತ್ತು ಎಂದು ತನಿಖೆಯಿಂದ ತಿಳಿದು ಬಂದಿದೆ. ಹಸುಗಳು, ಕರುಗಳು ಮತ್ತು ವಾಹನಗಳನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.