ಮಂಗಳೂರು: ಬಿಜೆಪಿಗೆ ಅಭೂತಪೂರ್ವ ಜನಸ್ಪಂದನೆ ವ್ಯಕ್ತವಾಗುತ್ತಿದ್ದು ಮಂಗಳೂರು ನಗರ ದಕ್ಷಿಣ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಎಂಟು ಕ್ಷೇತ್ರಗಳಲ್ಲಿ ಅತ್ಯಧಿಕ ಮತಗಳಿಂದ ಜಯ ಸಾಧಿಸಲಿದೆ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಿ.ವೇದವ್ಯಾಸ ಕಾಮತ್ ಹೇಳಿದ್ದಾರೆ.
ನಗರದ ಕೊಡಿಯಾಲ್ಬೈಲ್ ಭಗವತಿ ದೇವಸ್ಥಾನ ರಸ್ತೆಯ ಅಟಲ್ ಸೇವಾ ಕೇಂದ್ರದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಚುನಾವಣಾ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಂಗಳೂರು ನಗರದಲ್ಲಿ ಕಳೆದ 5 ವರ್ಷಗಳಲ್ಲಿ ಅಭೂತಪೂರ್ವ ಅಭಿವೃದ್ದಿ ಯೋಜನೆಗಳು ಅನುಷ್ಟಾನಗೊಂಡಿದೆ. 2 ವರ್ಷ ಕೊರೊನಾ ಸಂಕಷ್ಟದ ಹೊರತಾಗಿಯೂ ಸುಮಾರು 4500 ಕೋ.ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಮಂಜೂರಾಗಿದ್ದು ಇದರಲ್ಲಿ ಸುಮಾರು 2500 ಕೋ.ರೂ.ಯೋಜನೆಗಳು ಅನುಷ್ಟಾನವಾಗಿದೆ. ಉಳಿದ ಯೋಜನೆಗಳು ಅನುಷ್ಟಾನ ಹಂತದಲ್ಲಿದ್ದು 2026 ರ ವೇಳೆಗೆ ಮಂಗಳೂರಿನ ಚಿತ್ರಣವೇ ಬದಲಾಗಲಿದೆ ಎಂದರು.
ಬಿಜೆಪಿಯ ಚುನಾವಣಾ ಪ್ರಚಾರ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿದೆ. ಕಳೆದ 5 ವರ್ಷಗಳಲ್ಲಿ ಕ್ಷೇತ್ರದ ಸಮಸ್ಯೆಗಳಿಗೆ, ಜನರ ಸಂಕಷ್ಟಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ. ಚುನಾವಣಾ ಪ್ರಚಾರದ ವೇಳೆ ಕ್ಷೇತ್ರದ ಎಲ್ಲೆಡೆ ಜನ ಆತ್ಮೀಯವಾಗಿ ಬರಮಾಡಿಕೊಂಡು ಅಶೀರ್ವದಿಸುತ್ತಿದ್ದಾರೆ. ಕಳೆದ ಬಾರಿಗಿಂತಲೂ ಅತೀ ಹೆಚ್ಚು ಮತಗಳಿಂದ ಈ ಬಾರಿ ಜಯಗಳಿಸುವ ವಿಶ್ವಾಸ ನನಗಿದೆ . ಬಿಜೆಪಿಗೆ ಮತ ನೀಡಿ ಅಭಿವೃದ್ಧಿ ಪರ್ವವನ್ನು ಮುಂದುವರಿಯುವಂತೆ ಮಾಡಬೇಕು ಎಂದು ನಾನು ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದರು. ಜಿಲ್ಲೆಯಲ್ಲಿ ಈ ಬಾರಿ ಎಲ್ಲಾ ಎಂಟು ಕ್ಷೇತ್ರಗಳಲ್ಲಿ ಬಿಜೆಪಿ ಜಯಸಾಧಿಸಲಿದೆ ಎಂದವರು ಹೇಳಿದರು.
ಕಚೇರಿಯನ್ನು ಉದ್ಘಾಟಿಸಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ಅವರು ಜಿಲ್ಲೆಯಲ್ಲಿ ಬಿಜೆಪಿ ಅಲೆ ಇದ್ದು ಎಲ್ಲಾ ಎಂಟು ಸ್ಥಾನಗಳಲ್ಲೂ ಜಯಗಳಿಸಲಿದೆ. ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಳೆದ 5 ವರ್ಷಗಳಲ್ಲಿ ಅತೀ ಹೆಚ್ಚಿನ ಅಭಿವೃದ್ಧಿ ಯೋಜನೆಗಳು ಅನುಷ್ಟಾನವಾಗಿದೆ.ಶಾಸಕ ವೇದವ್ಯಾಸ ಕಾಮತ್ ಮತ್ತೊಮ್ಮೆ ಆರಿಸಿ ಬರುವುದು ನಿಶ್ಚಿತ ಎಂದರು.
ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಾಜಿ ಸಚಿವ ನಾಗರಾಜ ಶೆಟ್ಟಿ , ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಕೇಂದ್ರ ಸಮಿತಿಯಿಂದ ನಿಯೋಜಿತಉಸ್ತುವಾರಿ ನರೇಂದ್ರ, ಮುಖಂಡರಾದ ನಿತಿನ್ ಕುಮಾರ್, ರವಿಶಂಕರ ಮಿಜಾರ್, ವಿಜಯ ಕುಮಾರ್ ಶೆಟ್ಟಿ, ರೂಪಾ ಡಿ.ಬಂಗೇರ, ಉಮಾನಾಥ್, ಪ್ರೇಮಾನಂದ ಶೆಟ್ಟಿ, ಸುರೇಂದ್ರ ಮತ್ತಿತರರು ಉಪಸ್ಥಿತರಿದ್ದರು.