ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 7.45ರಿಂದ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಮತ ಯಾಚಿಸಲಿದ್ದಾರೆ. ಮೋದಿಯವರು ಭಾಗವಹಿಸುವ ಈ ಕಾರ್ಯಕ್ರಮಕ್ಕೆ ನಗರದೆಲ್ಲೆಡೆ ಪೊಲೀಸರು ಬಿಗಿ ಭದ್ರತೆ ಒದಗಿಸಲಾಗಿದೆ.
ರೋಡ್ ಶೋ ಬ್ರಹ್ಮಶ್ರೀ ನಾರಾಯಣಗುರು ವೃತ್ತರಿಂದ ಆರಂಭವಾಗಲಿದ್ದು, ಲಾಲ್ಬಾಗ್, ಪಿವಿಎಸ್ ವೃತ್ತದ ಮೂಲಕ ಸಾಗಿ ನವಭಾರತ ವೃತ್ತದಲ್ಲಿ ಸಮಾಪನಗೊಳ್ಳಲಿದೆ.
ನಾರಾಯಣ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರಧಾನಿ ರೋಡ್ ಶೋ ಆರಂಭಿಸಲಿದ್ದಾರೆ. ಸುಮಾರು 2000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಈ ರೋಡ್ ಶೋ ಭದ್ರತೆಗಾಗಿ ನಿಯೊಜಿಸಲಾಗಿದೆ.
ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು ಭದ್ರತಾ ವ್ಯವಸ್ಥೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ನಗರದ ಪ್ರಮುಖ ವೃತ್ತಗಳ ಬಳಿಯೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ರೋಡ್ ಶೋ ಸಾಗಲಿರುವ ಮಾರ್ಗದಲ್ಲಿ ಮಧ್ಯಾಹ್ನ 2 ಗಂಟೆಯಿಂದಲೇ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ನಗರದಲ್ಲಿ ಭಾನುವಾರ ಮಧ್ಯಾಹ್ನದಿಂದಲೇ ಸಿಟಿ ಬಸ್ಗಳ ಸಂಚಾರ ಕಡಿಮೆಯಾಗಿದೆ.