ಮಂಗಳೂರು, ಸೆ. 29: ಅತಿಥಿ ಶಿಕ್ಷಕರ ಬಾಕಿ ವೇತನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಸೇರಿದಂತೆ ಸಂಬಂಧಪಟ್ಟವರ ಗಮನಸೆಳೆಯಲಾಗಿದೆ. ಕಳೆದ ಐದು ತಿಂಗಳಿನಿಂದ ವೇತನ ಸಿಗದೆ ತೀರಾ ಅತಂತ್ರ ಸ್ಥಿತಿಯಲ್ಲಿರುವ ಅತಿಥಿ ಶಿಕ್ಷಕರ ಬಗ್ಗೆ ಸದನದ ತಿಳಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಲ್. ಭೋಜೇಗೌಡ ಹೇಳಿದ್ದಾರೆ.
ಅವರು ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ಈಗಾಗಲೇ . ಮುಖ್ಯಮಂತ್ರಿಯವರು ವೇತನ ಪಾವತಿಗೆ ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದರೂ ಇಲಾಖೆಯಿಂದ ಶಿಕ್ಷಕರಿಗೆ ವೇತನ ಬಿಡುಗಡೆಯಾಗುತ್ತಿಲ್ಲ ಯಾಕೆ ಎಂದು ತಿಳಿಯುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ದಸರಾ ಹಬ್ಬ ಮುಗಿಯುವುದರೊಳಗೆ ಅತಿಥಿ ಶಿಕ್ಷಕರ ಬಾಕಿ ವೇತನ ಪಾವತಿ ಮಾಡದಿದ್ದರೆ ಅ.6ರಂದು ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆಯ ನಿರ್ದೇಶಕರ ಕಚೇರಿ ಎದುರು ಧರಣಿ ನಡೆಸುವುದಾಗಿ ಹೇಳಿದ್ದಾರೆ.
ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಪ್ರಾಕೃತಿಕ ವಿಕೋಪದಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ. ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ರಾಜ್ಯದಲ್ಲಿ ಮಳೆಯಿಂದ ಆಗಿರುವ ಹಾನಿ ಬಗ್ಗೆ ಸಮರ್ಪಕ ಚರ್ಚೆ ನಡೆದಿಲ್ಲ. ದ.ಕ. ಜಿಲ್ಲೆ ಸೇರಿದಂತೆ ಈವರೆಗೂ ಅಧಿಕಾರಿಗಳು ಆಯಾ ಜಿಲ್ಲೆಗಳಲ್ಲಿ ಮಳೆಯಿಂದ ಆಗಿರುವ ನಷ್ಟದ ಬಗ್ಗೆ ಅಂದಾಜು ಪಟ್ಟಿ ತಯಾರಿಸಿಲ್ಲ. ತರಕಾರಿ, ಬೇಳೆಕಾಳು, ಭತ್ತ, ರಾಗಿ, ಜೋಳ ಸೇರಿದಂತೆ ಆಹಾರ ಧಾನ್ಯಗಳ ಬಿತ್ತನೆ ಕಾರ್ಯ ಈಗ ಮಾಡುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ.
ಕೃಷಿಯನ್ನು ನಂಬಿರುವ ಜನರು ಈ ವರ್ಷ ಆದಾಯವನ್ನೇ ಕಂಡಿಲ್ಲ. ಸೇತುವೆಗಳು ಕೊಚ್ಚಿ ಹೋಗಿವೆ. ರಸ್ತೆಗಳು ಹಾಳಾಗಿವೆ. ಮನೆಗಳು ನಾಶವಾಗಿವೆ. 2019ರಿಂದ ರಾಜ್ಯಾದ್ಯಂತ ಪ್ರಾಕೃತಿಕ ವಿಕೋಪದಿಂದ ಸಾಕಷ್ಟು ತೊಂದರೆಯಾಗುತ್ತಿದ್ದರೂ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಮಾತ್ರವಲ್ಲದೆ, ತಜ್ಞರು ಸೂಕ್ತ ಪರಿಹಾರವನ್ನು ನೀಡುವಲ್ಲಿ ಸೋತಿದ್ದಾರೆ ಎಂದು ಭೋಜೇಗೌಡ ಆರೋಪಿಸಿದರು.
ಪ್ರಾಕೃತಿಕ ವಿಕೋಪದಿಂದ ನಷ್ಟ ಸಂಭವಿಸಿರುವ ರೈತರಿಗೆ ಸರಕಾರ ಕೂಡಲೇ ಪರಿಹಾರ ಒದಗಿಸಬೇಕು. ಈ ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ಕೊಡಗಿನಲ್ಲಿ ಸಂಭವಿಸಿದ ಭೂಕುಸಿತದಿಂದ ಹಾನಿಗೊಳಗಾಗಿದ್ದವರಿಗೆ ತಲಾ 12 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಲಾಗಿತ್ತು. ಅಂತಹ 1,200 ಮನೆಗಳ ಉದ್ಘಾಟನೆಯನ್ನು ಮುಖ್ಯಮಂತ್ರಿಯಾಗಿದ್ದ ವೇಳೆ ಯಡಿಯೂರಪ್ಪ ಮಾಡಿದ್ದರು. ಆದರೆ ಆ ಬಳಿಕದ ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದವರಿಗೆ ಶಾಶ್ವತ ಮನೆ ನಿರ್ಮಾಣ ಮಾಡುವಲ್ಲಿ ಸರಕಾರ ವಿಫಲವಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಾಕೆ ಮಾಧವ ಗೌಡ, ಅಕ್ಷಿತ್ ಸುವರ್ಣ, ರತೀಶ್, ರಮೀಝಾ ಬಾನು, ಇಕ್ಬಾಲ್ ಅಹ್ಮದ್ ಮುಲ್ಕಿ ಉಪಸ್ಥಿತರಿದ್ದರು.