ಮಂಗಳೂರು: ಕರಾವಳಿಯ ಕೆಲವು ಕಡೆಗಳಲ್ಲಿ ಕೆಂಗಣ್ಣು ಕಾಯಿಲೆ ಸಮಸ್ಯೆ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದು ವೈದ್ಯರು ತಿಳಿಸಿದ್ದಾರೆ. ಸುಮಾರು 10 ದಿನಗಳ ಹಿಂದೆ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡೀಲ್ ಪ್ರದೇಶದ ಹಲವಾರು ಮನೆಗಳ ಸದಸ್ಯರು ಈ ಕಾಯಿಲೆಗೆ ತುತ್ತಾಗಿದ್ದರು.
ಪ್ರಸ್ತುತ ಸಮೀಪದ ಪೆರ್ಮುದೆ, ಎಕ್ಕಾರು ಗ್ರಾಮ ಪಂಚಾಯತ್, ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಗೂ ಹರಡಿದ್ದು, ಪರಿಸರದಲ್ಲಿ ಕಪ್ಪು ಕನ್ನಡಕ ಧರಿಸಿ ಓಡಾಡುವವರ ಸಂಖ್ಯೆ ಹೆಚ್ಚುತ್ತಿದೆ.
ಬಾಧಿತರಲ್ಲಿ ವಿದ್ಯಾರ್ಥಿಗಳು, ವ್ಯಾಪಾರಿಗಳೂ ಇದ್ದು, ಅವರ ಮೂಲಕ ವೇಗವಾಗಿ ಇತರರಿಗೆ ಹರಡುವ ಸಾಧ್ಯತೆ ಇದೆ.ಮುನ್ನೆಚ್ಚರಿಕೆ ಅಗತ್ಯ
ಈ ಬಗ್ಗೆ ಬಜಪೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಚಾರಿಸಿದಾಗ ಕೆಂಗಣ್ಣು ಸಮಸ್ಯೆ ಬಾಧಿಸಿರುವ ಬಗ್ಗೆ ಯಾವುದೇ ಮಾಹಿತಿಗಳು ಈ ತನಕ ಬಂದಿಲ್ಲ ಎಂದು ಹೇಳಿದ್ದಾರೆ. ಸೂಕ್ತ ಮುನ್ನೆಚ್ಚರಿಕೆ ವಹಿಸುವುದರಿಂದ ಈ ಕಾಯಿಲೆಯಿಂದ ದೂರ ಇರಬಹುದು ಎಂದು ಅವರು ತಿಳಿಸಿದ್ದಾರೆ.
ಏನಿದು ಕಾಯಿಲೆ?
“ಮದ್ರಾಸ್ ಐ’ ಎಂದೂ ಕರೆಯಲ್ಪಡುವ ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ ಸೋಂಕು. ಕಣ್ಣಿನ ಬಿಳಿಭಾಗದ ಮೇಲ್ಮೆ ಮತ್ತು ಕಣ್ಣಿನ ರೆಪ್ಪೆಗಳ ಒಳಭಾಗ ಉರಿಯೂತಕ್ಕೆ ಈಡಾಗಿ ಕೆಂಪು ಅಥವಾ ಗುಲಾಬಿ ಬಣ್ಣ ಹೊಂದಿ ಊದಿಕೊಳ್ಳುವುದು ಇದರ ಲಕ್ಷಣ. ಇದು ಸುಲಭವಾಗಿ ಹರಡುವ ಸೋಂಕು ರೋಗ.ಇದಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗ ಲಕ್ಷಣಗಳನ್ನು ಕಡಿಮೆ ಮಾಡಲು ಐ ಡ್ರಾಪ್ನಂತಹ ಔಷಧಗಳನ್ನು ವೈದ್ಯರು ಸೂಚಿಸುತ್ತಾರೆ.
ಕೆಂಗಣ್ಣು ರೋಗ ಪ್ರದೇಶದಲ್ಲಿ ಇರುವಾಗ ಕಣ್ಣುಗಳನ್ನು ಮುಟ್ಟಿ ಕೊಳ್ಳದಿರುವುದು, ಆಗಾಗ ಕೈಗಳನ್ನು ಸ್ವತ್ಛಗೊಳಿಸಿಕೊಳ್ಳುವುದು, ರೋಗಪೀಡಿತರ ಸಂಪರ್ಕದಿಂದ ದೂರ ಇರುವ ಮೂಲಕ ಕೆಂಗಣ್ಣು ಸೋಂಕು ಪ್ರಸರಣ ತಪ್ಪಿಸಬಹುದು.