2020-21ನೇ ಶೈಕ್ಷಣಿಕ ವರ್ಷದ ಮಾರ್ಚ್ -2021 ರಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಕಲಾ , ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಲ್ಲಿ ಪ್ರತಿ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಪರಿಶಿಷ್ಟ ಜಾತಿ – ಪಂಗಡದ ವಿದ್ಯಾರ್ಥಿ ವಿಧ್ಯಾರ್ಥಿನಿಯರಿಗೆ ಬಹುಮಾನವಾಗಿ ಕೊಡಮಾಡುವ ಲ್ಯಾಪ್ ಟಾಪ್ ಗಳನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ವಿತರಿಸಿದರು.
ರಥಬೀದಿ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಾಪ್ ಟಾಪ್ ವಿತರಿಸಿ ಮಾತನಾಡಿದ ಶಾಸಕ ಕಾಮತ್, 2021-22 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಪರಿಶಿಷ್ಟ ಜಾತಿ – ಪಂಗಡದ ವಿಧ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಬಹುಮಾನವಾಗಿ ನೀಡುವ 24 ಲ್ಯಾಪ್ ಟಾಪ್ ಗಳನ್ನು ವಿಧ್ಯಾರ್ಥಿಗಳಿಗೆ ನೀಡಿ ಅವರ ಮುಂದಿನ ವಿಧ್ಯಾಭ್ಯಾಸಕ್ಕೆ ಹೆಚ್ಚಿನ ಸಹಕಾರ ನೀಡಿದಂತಾಗಿದೆ ಎಂದು ಹೇಳಿದರು.
ಆರ್ಥಿಕ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಶಿಕ್ಷಣಕ್ಕೆ ಯಾವುದೇ ರೀತಿಯಲ್ಲಿ ಸಮಸ್ಯೆಯಾಗಬಾರದು. ಪ್ರಜ್ಞಾವಂತ ನಾಗರಿಕರ ನಿರ್ಮಾಣಕ್ಕೆ ಶಿಕ್ಷಣ ಮಹತ್ವದ ಮೈಲಿಗಲ್ಲಾಗಿದ್ದು ಶಿಕ್ಷಣದಿಂದ ಯಾರೂ ವಂಚಿತರಾಗಬಾರದು ಎಂದು ಶಾಸಕ ಕಾಮತ್ ಹೇಳಿದರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಡಿ ಜಯಣ್ಣ, ದಕ್ಷಿಣ ಕನ್ನಡ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಸಿದ್ದೇಶ್ವರ ಬೇವಿನಮಟ್ಟಿ, ದಕ್ಷಿಣ ಕನ್ನಡ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಗಂಗಾಧರ ಆಳ್ವ, ಪದವಿಪೂರ್ವ ಶಿಕ್ಷಣ ಇಲಾಖೆಯ ಶಾಖಾಧಿಕಾರಿ ನಿತಿನ್ ಬಿ.ಟಿ, ಕಾಲೇಜಿನ ಪ್ರಾಂಶುಪಾಲರಾದ ಭಾರತಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.