ಮಂಗಳೂರು: ಉಲ್ಲಾಳದ ಬಟ್ಟಂಪಾಡಿ ಕಡಲಿನಲ್ಲಿ ಮುಳುಗಿರುವಾಗ ಎಂವಿ ಪ್ರಿನ್ಸಸ್ ಮಿರಾನ್ ಹಡಗಿನಲ್ಲಿ ಇದುವರೆಗೆ ಯಾವುದೇ ರೀತಿಯ ತೈಲ ಸೋರಿಕೆ ಕಂಡು ಬಂದಿರುವುದಿಲ್ಲ. ಕರಾವಳಿ ರಕ್ಷಣಾ ಪಡೆಗೆ ಸೇರಿದ 3 ವಿಶೇಷ ನೌಕೆ ಅಲ್ಲದೆ ಡೋರ್ನಿಯರ್ ವಿಮಾನದ ಮೂಲಕವೂ ಈ ಬಗ್ಗೆ ನಿರಂತರ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ತಕ್ಷಣ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಸಮುದ್ರದಲ್ಲಿ ತೈಲ ಸೋರಿಕೆಯಾದಲ್ಲಿ ನಿವಾರಣಾ ಕ್ರಮಗಳನ್ನು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳು ಹಾಗೂ ಸುರಕ್ಷತೆಗಳ ಬಗ್ಗೆ ಈಗಾಗಲೇ ಜಿಲ್ಲಾಡಳಿತದ ವತಿಯಿಂದ ಅಣಕು ಕಾರ್ಯಾಚರಣೆ ನಡೆಸಲಾಗಿದ್ದು ಅಗತ್ಯ ಪರಿಕರಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳಲಾಗಿದೆ.
ನೌಕಾಯಾನ ಇಲಾಖೆಯ, ಮಹಾನಿರ್ದೇಶಕರು, ಕರಾವಳಿ ಕಾವಲು ಪಡೆಯ ಕೇಂದ್ರ ಕಚೇರಿ ಹಾಗೂ ಪಶ್ಚಿಮ ಕಚೇರಿಗಳು, ಜಿಲ್ಲಾಧಿಕಾರಿ ಕಚೇರಿ, ಎಂಎಂಡಿ ಇಲಾಖೆಯ ಅಧಿಕಾರಿಗಳು ನವಮಂಗಳೂರು ಬಂದರು ಪ್ರಾಧಿಕಾರ ಹಾಗೂ ಹಡಗಿನ ಮಾಲೀಕ ರೊಂದಿಗೆ ಈ ಸಮಸ್ಯೆಯನ್ನು ಬಗೆಹರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ಹಡಗಿನ ತೆರವಿಗೆ ಏಜೆನ್ಸಿಗಳನ್ನು ನಿಯೋಜಿಸುವ ಬಗ್ಗೆ ನೌಕಾಯಾನ ಇಲಾಖೆಯ ಮಹಾನಿರ್ದೇಶಕರು ಕ್ರಮ ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ವಹಿಸಬೇಕಾದ ಕ್ರಮಗಳ ಬಗ್ಗೆ ತಾಂತ್ರಿಕ ಪರಿಣತರು ಜಿಲ್ಲಾಡಳಿತಕ್ಕೆ ಮಾರ್ಗದರ್ಶನ ನೀಡುತ್ತಿದ್ದು ಅದರಂತೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹಡಗಿಗೆ ಸಂಬಂಧಿತ ವಿಷಯ ಹಾಗೂ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ನೌಕಾಯಾನ ಇಲಾಖೆಯ ಮಹಾನಿರ್ದೇಶಕರು ಕರಾವಳಿ ರಕ್ಷಣಾ ಪಡೆ, ಎನ್ ಎಂಪಿಟಿ, ಎಂಆರ್ ಪಿಎಲ್, ಸೇರಿದಂತೆ ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಇಲಾಖೆಗಳು ಪ್ರತಿ ದಿನ ಸಂಜೆ 5ಗಂಟೆಗೆ ವರ್ಚುವಲ್ ಮಾಧ್ಯಮದ ಮೂಲಕ ಸಭೆ ನಡೆಸುತ್ತಿದೆ.
ಪರಿಸ್ಥಿತಿಗೆ ತಕ್ಕಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿನ್ನೆಯಷ್ಟೇ ಸಣ್ಣ ಪ್ರಮಾಣದಲ್ಲಿ ತೈಲ ಸೋರಿಕೆಯಾಗಿದ್ದು ಉಳ್ಳಾಲ ಭಾಗದಲ್ಲಿ ಮೀನುಗಾರಿಕೆ ನಡೆಸಬಾರದೆಂದು ಜಿಲ್ಲಾಡಳಿತ ಸೂಚನೆ ನೀಡಿತ್ತು ಇದೀಗ ಸಾರ್ವಜನಿಕರ ಕಡೆಯಿಂದ ಆಕ್ರೋಶ ಬರುತ್ತಲೇ ತೈಲ ಸೋರಿಕೆ ಯಾಗಿಲ್ಲ ಹಡಗನ್ನು ತೆರವು ಮಾಡಲಾಗುತ್ತದೆ ಎಂಬ ಪ್ರಕಟಣೆ ನೀಡಿದ್ದಾರೆ.