ಮಂಗಳೂರು: ಕಾಂಗ್ರೆಸ್ ಮಂಗಳವಾರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿಯೂ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಯಾರು ಎಂಬುದಕ್ಕೆ ಉತ್ತರ ದೊರೆತಿಲ್ಲ.
ಮಂಗಳೂರು ಉತ್ತರ ಕ್ಷೇತ್ರದಲ್ಲಿ ಟಿಕೆಟ್ಗಾಗಿ ಮೊಯ್ದಿನ್ ಬಾವಾ ಮತ್ತು ಇನಾಯತ್ ಅಲಿ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಬಾವಾ ಅವರು 2018ರ ಚುನಾವಣೆಯಲ್ಲಿ ಬಿಜೆಪಿಯ ಭರತ್ ಶೆಟ್ಟಿ ಅವರ ವಿರುದ್ಧ ಸೋಲು ಅನುಭವಿಸಿದ್ದರು. ಈ ಬಾರಿಯೂ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ನಾಮಪತ್ರ ಸಲ್ಲಿಕೆಗೆ ಕೇವಲ ಒಂದು ದಿನ ಬಾಕಿ ಇದ್ದರೂ ಕಾಂಗ್ರೆಸ್ ಪಾಳಯದ ಅಭ್ಯರ್ಥಿ ಗೊಂದಲಕ್ಕೆ ಇದುವರೆಗೂ ಉತ್ತರ ದೊರೆತಿಲ್ಲ.
ಸಿದ್ದರಾಮಯ್ಯ ಗುಂಪಿನಲ್ಲಿ ಬಾವಾ ಗುರುತಿಸಿಕೊಂಡಿದ್ದು, ಅಲಿ ಡಿ.ಕೆ. ಶಿವಕುಮಾರ್ ಬಣದಲ್ಲಿದ್ದಾರೆ. ಅಲಿ ಅವರು ಬಾವಾ ಅವರಿಗಿಂತ ಹಣಕಾಸಿನ ವಿಚಾರದಲ್ಲಿ ಬಲಿಷ್ಠರಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಹವರ್ತಿ ಆಗಿರುವ ಕಾರಣ ಅವರಿಗೆ ಟಿಕೆಟ್ ಘೋಷಣೆ ಆಗಲಿದೆ ಎಂದು ಈ ಹಿಂದೆ ಮಾತುಗಳು ಕೇಳಿಬಂದಿತ್ತು. ಆದರೆ ಬಾವಾ ಕೂಡ ಸಿದ್ದರಾಮಯ್ಯ ಮೂಲಕ ಟಿಕೆಟ್ಗಾಗಿ ವಿರೋಚಿತ ಹೋರಾಟ ನಡೆಸುತ್ತಿದ್ದು, ಯಾರ ಕೈ ಮೇಲಾಗಲಿದೆ ಎಂಬದು ಇಂದು ಸಂಜೆಯೊಳಗೆ ನಿರ್ಧಾರವಾಗುವ ಸಾಧ್ಯತೆ ಇದೆ.