ಮಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದ್ದು, ಮೂರು ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿದೆ. ಮಂಗಳೂರಿನಲ್ಲಿ ಮತಪ್ರಚಾರ ವೇಳೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ, ಡಬಲ್ ಇಂಜಿನ್ ಸರ್ಕಾರಕ್ಕೆ ಜನರು ಒಂದು ಅವಕಾಶ ಕೊಟ್ಟಿದ್ದರು, ಆದರೆ ಆ ಅವಕಾಶವನ್ನು ಸರ್ಕಾರ ಸರಿಯಾಗಿ ಬಳಸಿಕೊಂಡಿಲ್ಲ ಎಂದರು.
ಡಬಲ್ ಇಂಜಿನ್ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಆಗಿಲ್ಲ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಆದ್ದರಿಂದ ಜನರು ಡಬಲ್ ಇಂಜಿನ್ ಸರ್ಕಾರ ವನ್ನು ನಂಬುವುದಿಲ್ಲ. ಹೀಗಾಗಿ ನಮ್ಮ ಗೆಲುವಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದರು.
ಬಡ ಜನರಿಗೆ ಮತ್ತು ಸಾಮಾನ್ಯ ವರ್ಗಕ್ಕೆ ಕಾಂಗ್ರೆಸ್ ಪಕ್ಷ ದ ಗೆಲುವು ಅಗತ್ಯವಾಗಿದೆ. ಸಿದ್ದರಾಮಯ್ಯ ಸರ್ಕಾರ ಇರುವಾಗ ಹಲವಾರು ಅಭಿವೃದ್ಧಿ ಕಾರ್ಯಗಳಾಗಿವೆ ಇಂತಹ ಅಭಿವೃದ್ಧಿ ಕಾರ್ಯಗಳು ಮುಂದುವರಿಯಬೇಕಾದರೆ ಕಾಂಗ್ರೆಸ್ ಪಕ್ಷದ ಗೆಲುವು ಅಗತ್ಯವಾಗಿದೆ. ಜನರು ಬೆಲೆ ಏರಿಕೆ ಭ್ರಷ್ಟಾಚಾರದಿಂದ ಬೇಸತ್ತು ಹೋಗಿ ನಮ್ಮನ್ನು ಬೆಂಬಲಿಸುತ್ತಾರೆ ಎಂಬ ನಂಬಿಕೆ ನಮಗಿದೆ ಎಂದರು.
ಈ ಬಾರಿ ಚುನಾವಣೆಗೆ ಕಾಂಗ್ರೆಸ್ ಪಕ್ಷ ಗೃಹಲಕ್ಷ್ಮಿ, ಗೃಹಜ್ಯೋತಿ, ಯುವ ನಿಧಿ ಹಾಗೂ ಅನ್ನಭಾಗ್ಯ ಯೋಜನೆ ಎಂಬ ನಾಲ್ಕು ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತಿದೆ ಎಂದರು.